ಬೀದರ್ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮವಾರ ಬಿಜೆಪಿ ಮತ್ತು ಜೆಡಿಎಸ್ ನಿಂದ ಜಂಟಿಯಾಗಿ ವಿಶೇಷ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರವಾಸಿ ಮಂದಿರ ಬಳಿ ಜಮಾಯಿಸಿದ ಕಾರ್ಯಕರ್ತರು, ಅಂಬೇಡ್ಕರ್ ವೃತ್ತದವರೆಗೆ ಬೈಕ್ ಮತ್ತು ಕಾರು ಎಳೆದು ತೈಲ ದರ ಹೆಚ್ಚಳಕ್ಕೆ ಆಕ್ರೋಶ ವ್ಯಕ್ತಪಡಿಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಅನುಷ್ಕಾನಕ್ಕಾಗಿ ಆರು ವಸ್ತುಗಳ ಬೆಲೆ ಹೆಚ್ಚಳ ಮಾಡಿ ಬಡ ಜನರ ಮೇಲೆ ಆರ್ಥಿಕ ಬರೆ ಹಾಕಿದೆ. ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ತೈಲ ಬೆಲೆ ಕಡಿಮೆ ಕಾರಣ ತೆರಿಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರು ಸಮರ್ಥಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೈಲ ಬೆಲೆ ಕಡಿಮೆ ಇರುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಶಶಿಧರ ಹೊಸಳ್ಳಿ ಮತ್ತಿತರರು ಭಾಗವಹಿಸಿದ್ದರು.