ಮಂಗಳೂರು: ಅಬುಧಾಬಿಯಲ್ಲಿರುವ ಪ್ರತಿಷ್ಠಿತ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಇವರು ಪ್ರತಿಷ್ಠಿತ ‘ಆರ್ಯಭಟ ಇಂಟರ್ನ್ಯಾಷನಲ್ ಅವಾರ್ಡ್-2024’ ಪುರಸ್ಕಾರಕ್ಕೆ ಆಯ್ಕೆಯಾಗಿ ಪ್ರಶಸ್ತಿ ಸ್ವೀಕರಿಸಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 23ರ ರಂದು ನಡೆದ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿಯನ್ನು ಜಯರಾಮ ರೈಯವರು ಪಡೆದುಕೊಂಡರು.
ಪ್ರಶಸ್ತಿ ಸ್ವೀಕರಿಸದ ಬಳಿಕ ಮಾತನಾಡಿದ ಅವರು, ದೇವರ ಕೃಪೆ, ಮತ್ತು ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆಗಳಿಂದ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲು ನಾನು ನಿಜವಾಗಿಯೂ ಗೌರವ ಮತ್ತು ತುಂಬಾ ಹೃದಯದಿಂದ ಕೃತಜ್ಞನಾಗಿದ್ದೇನೆ. ಈ ಪ್ರಶಸ್ತಿಯು ಸಾಂಸ್ಕೃತಿಕ ಪರಂಪರೆ, ಸಾಮಾಜಿಕ ಕಲ್ಯಾಣ ಮತ್ತು ಸಮುದಾಯದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ಪ್ರೇರಣೆಯಾಗಿದೆ. ಈ ಮನ್ನಣೆಯು ಕೇವಲ ವೈಯಕ್ತಿಕ ಸಾಧನೆಯಾಗಿರದೆ ನಿಮ್ಮಲ್ಲಿ ಪ್ರತಿಯೊಬ್ಬರ ಸಾಮೂಹಿಕ ಪ್ರಯತ್ನಗಳು ಮತ್ತು ಅಚಲವಾದ ಬೆಂಬಲಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಜಯರಾಮ ರೈಯವರು ಮಾಡುತ್ತಿರುವ ಸಮಾಜ ಸೇವೆ ಮತ್ತು ಸಾಂಸ್ಕೃತಿಕ, ಸಾಹಿತ್ಯಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ, ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಬೆಂಗಳೂರು ಇವರು ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು.
ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿದೆ. ಇವರು ಇಂಡಿಯಾ ಸೋಷಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟಕ್ ನ್ಯಾಷನಲ್ ಅಬಧಾಬಿ ಇದರ ಸ್ಥಾಪಕಾಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಧಾರ್ಮಿಕ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಇವರು ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಅವರನ್ನೂ ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ನಡೆಸಲ್ಪಡುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮಗಳಲ್ಲಿ ಪ್ರತಿ ತಿಂಗಳು ನಡೆಯುವ ಸಾಹಿತ್ಯ ಸಂಭ್ರಮದ ಕಾರ್ಯಕ್ರಮದ ಮಹಾಪೋಷಕರಾಗಿದ್ದಾರೆ.