ಬೆಳಗಾವಿ: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.ಇದರ ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸಚಿವರು ಆದೇಶಿಸಿದ್ದಾರೆ.

ಇತ್ತೀಚೆಗೆಷ್ಟೆ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು.

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೊ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌