ಬೆಂಗಳೂರು: ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ ಐದು ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ.

ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ಸರ್ಕಾರ ರಾಜ್ಯ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಅಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆ-1963ರ ಸೆಕ್ಷನ್ 86 ಮತ್ತು 87ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ವಿಚಾರಣಾ ನ್ಯಾಯಾಲಯ ಆರೋಪಿಗೆ ಸೆಕ್ಷನ್ 86 (ಗಂಧದ ಮರ ಕತ್ತರಿಸಿದ) ಅಡಿಯಲ್ಲಿ 5 ವರ್ಷ ಶಿಕ್ಷೆ ಹಾಗೂ ಕೇವಲ 10 ಸಾವಿರ ರು. ದಂಡ ವಿಧಿಸಿದೆ.