ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಭವಿಸಿದ ಭಾರೀ ಮಳೆಯಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಟ್ರಿನಿಟಿ ನಿಲ್ದಾಣದಿಂದ ಮಹಾತ್ಮ ಗಾಂಧಿ ರಸ್ತೆ ಕಡೆಗೆ ಹೊರಡುವ ಮಾರ್ಗದಲ್ಲಿ ಮೆಟ್ರೋ ಹಳಿಗಳ ಮೇಲೆ ಮರದ ಕೊಂಬೆ ಬಿದ್ದಿರುವ ಕಾರಣ, ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ, ರಾತ್ರಿ 7.26 ಗಂಟೆಯಿಂದ ಇಂದ್ರಾನಗರದಿಂದ ವೈಟ್ಫೀಲ್ಡ್ ಮತ್ತು ಎಂ.ಜಿ ರಸ್ತೆಯಿಂದ ಚಲ್ಲಘಟ್ಟದ ನಡುವೆ ಮಾತ್ರ ರೈಲುಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿಂದು ಸುರಿದ ಭಾರೀ ಮಳೆಯಿಂದಾಗಿ ಅವಾಂತರ ಸಂಭವಿಸಿದ್ದು, ಹಳಿಗಳ ಮೇಲೆ ಬಿದ್ದಿರುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಶೀಘ್ರದಲ್ಲೇ ಸಂಚಾರ ಪುನರಾರಂಭಿಸಲಾಗುತ್ತದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದೆ.

