ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ  ಅಕ್ಟೋಬರ್ 3ರಂದು ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ದಸರಾ ಮಹೋತ್ಸವ ಸಂಬಂಧ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,  ಆದರೆ ಈ ಬಾರಿ  ದಸರಾ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಕೊರೊನಾ ಬಂದಿದ್ದರಿಂದ ಕಳೆದ ಬಾರಿ ವಿಜೃಂಭಣೆಯಿಂದ ಆಚರಿಸಲಾಗಲಿಲ್ಲ, ಕಳೆದ ಬಾರಿ  30 ಕೋಟಿ ರೂ. ಆಗಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಖರ್ಚು ಆಗಬಹುದು ಎಂದಿದ್ದಾರೆ ಎಂದರು.  ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುವ ಸರ್ವಾನುಮತದಿಂದ ಅಧಿಕಾರವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ‌ ಮಹದೇವಪ್ಪರಿಗೆ ನೀಡಲಾಗಿದೆ.

21 ದಿನ ದೀಪಾಲಂಕಾರ
ದಸರಾ ಉದ್ಘಾಟನೆ ದಿನವೇ ಸಾಂಸ್ಕೃತಿಕ ಕಾರ್ಯಕ್ರಮ, ದೀಪಾಲಂಕಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ಯುವ ಸಂಭ್ರಮ, ಕ್ರೀಡೆಗಳು ಎಲ್ಲವೂ ಆರಂಭವಾಗುತ್ತದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು.

ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು. ಜಂಬೂಸವಾರಿ ಮುಗಿದ ಬಳಿಕವೂ 11 ದಿನ ದೀಪಾಲಂಕಾರ ಇರಲಿದೆ. ಒಟ್ಟು 21 ದಿನಗಳ ಕಾಲ ಮಾಡಲಿದ್ದು, ಆಕರ್ಷಣೆಯಿಂದ ಇರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.