ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಎಲ್ಲ ಮಹಿಳೆಯರಿಗೆ ಗ್ಯಾರಂಟಿ ನೀಡಿ, ಅವರ ಗಂಡಂದಿರಿಗೆ ಟ್ಯಾಕ್ಸ್ ಹಾಕಿದ್ದಾರೆ. ಕಾಂಗ್ರೆಸ್ಗೆ ಮಾನ ಮರ್ಯಾದೆ ಹೋಗಿದೆ. ಮುಸ್ಲಿಂ ತುಷ್ಟೀಕರಣ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸಿದ್ದರಿಂದ ಕಾಂಗ್ರೆಸ್ಗೆ ಹೀಗಾಗಿದೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸೇರಿ ಎನ್ಡಿಎಗೆ 51.66% ಮತ ಬಂದಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ಗೆ 45.43% ಬಂದಿದೆ. ಅಂದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಎರಡಂಕಿ ದಾಟುತ್ತೇವೆ ಎಂದು ಅವರು ಹೇಳುತ್ತಲೇ ಇದ್ದರು. ಆದರೆ ಅವರು ವಿಫಲರಾಗಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರಿನಲ್ಲಿ 1.39 ಲಕ್ಷ ಅಂತರ ಬಂದಿದ್ದು, ಮುಖ್ಯಮಂತ್ರಿ ಫೇಲ್ ಆಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಸಹೋದರ ಹೀನಾಯವಾಗಿ ಸೋತಿದ್ದಾರೆ. ರಾಜಕೀಯಕ್ಕೆ ಮೊದಲ ಬಾರಿಗೆ ಬಂದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ 2.69 ಲಕ್ಷ ಅಂತರ ಕೊಟ್ಟಿದ್ದಾರೆ ಎಂದು ತಿಳಿಸಿದರು.
2019 ರಲ್ಲಿ ಕಾಂಗ್ರೆಸ್ 52 ಸ್ಥಾನ ಪಡೆದಿದ್ದು, 2024 ರಲ್ಲಿ 99 ಸ್ಥಾನ ಪಡೆದು, 47 ಸ್ಥಾನ ಹೆಚ್ಚಿಸಿಕೊಂಡಿದೆ. ಈಗ ಇಂಡಿಯಾ ಕೂಟದಿಂದಾಗಿ ಕಾಂಗ್ರೆಸ್ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಕಾಂಗ್ರೆಸ್ಗೆ ಸಿಕ್ಕಿರುವುದು 99 ಸ್ಥಾನ ಮಾತ್ರ. ಇಂಡಿಯಾ ಒಕ್ಕೂಟಕ್ಕೆ ಸಿಕ್ಕಿರುವುದು 232 ಸ್ಥಾನಗಳು. ಬಿಜೆಪಿಗೆ 239 ಸ್ಥಾನಗಳಿವೆ. ಅಂದರೆ ಒಟ್ಟು ಇಂಡಿಯಾ ಕೂಟ ಪಡೆದ ಸ್ಥಾನಗಳು ಬಿಜೆಪಿಗಿಂತಲೂ ಕಡಿಮೆ ಇದೆ ಎಂದರು.
ಕಾಂಗ್ರೆಸ್ ಸಚಿವರ ಮಕ್ಕಳು ಸೋತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನರು ತೋರಿರುವ ವಿರೋಧ ಎಂದರು.

