ಬೆಂಗಳೂರು:   ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು.

ಈ ಆರೋಪದ ಮೇಲೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮತ್ತು ಇತರ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಆ ಕುರಿತ ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ) ವಿಚಾರಣ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಇದೀಗ ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣ ಸಂಚಾರ ವಿಚಕ್ಷಣ ಅಧಿಕಾರಿಯಾಗಿದ್ದ ವಿಶ್ವನಾಥ್‌ ಶೆಟ್ಟಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.