ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿವೆ.

9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಬೆಳಗಾಗುವ ಮುನ್ನವೇ ತಂಡ ಕಟ್ಟಿಕೊಂಡು ದಾಳಿ ನಡೆಸಿದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇವರ ತಪಾಸಣೆ ನಡೆದಿದೆ.

ಕಲಬುರಗಿಯಲ್ಲಿ ಬಿಬಿಎಂಪಿ ರೆವಿನ್ಯೂ ಅಧಿಕಾರಿ ಬಸವರಾಜ ಮಾಗಿ, ಮಂಡ್ಯದಲ್ಲಿ ಗ್ರಾಮೀಣ ನೀರು ಸರಬರಾಜು ನಿವೃತ್ತ ಎಕ್ಷಿಕ್ಯೂಟಿವ್‌ ಇಂಜಿನಿಯರ್‌ ಶಿವರಾಜು ಎಸ್.‌, ಚಿತ್ರದುರ್ಗದಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಚೀಫ್‌ ಇಂಜಿನಿಯರ್‌ ಎಂ. ರವೀಂದ್ರ, ಧಾರವಾಡದಲ್ಲಿ ಪ್ರಾಜೆಕ್ಟ್‌ ಡೈರೆಕ್ಟರ್‌ ಶೇಖರ ಗೌಡ, ಬೆಳಗಾವಿಯಲ್ಲಿ ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಮಹಾದೇವ ಬನ್ನೂರ್‌, ದಾವಣೆಗೆರೆಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಡಿ.ಎಚ್‌ ಉಮೇಶ್‌, ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಎಂ.ಎಸ್‌ ಪ್ರಭಾಕರ್‌, ಮೈಸೂರಿನಲ್ಲಿ ಸೂಪರಿಂಟೆಂಡೆಂಟ್‌ ಇಂಜಿಯರ್ ಮಹೇಶ್‌ ಕೆ., ಹಾಸನದಲ್ಲಿ ಸೆಕ್ರೆಟರಿ ಎನ್.ಎಂ ಜಗದೀಶ್‌, ಚಿತ್ರದುರ್ಗದಲ್ಲಿ ಸೂಪರಿಂಟೆಂಡೆಂಟ್‌ ಇಂಜಿಯರ್ ಕೆ.ಜಿ ಜಗದೀಶ್‌ ಇವರುಗಳ ಮನೆಗಳು, ಕಚೇರಿಗಳು ಹಾಗೂ ಇತರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.