ಬೆಂಗಳೂರು: ಈ ಬಾರಿ ಬಹಳ ಬೇಗ ರಾಜ್ಯಕ್ಕೆ ಮುಂಗಾರು ಮಾರುತ ಎಂಟ್ರಿ ಕೊಡುತ್ತಿದೆ. ಇಂದಿನಿಂದ ಒಂದು ವಾರ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಪ್ರತಿ ವರ್ಷ ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಆಗುತ್ತದೆ. ಆದರೆ ಈ ಬಾರಿ ಕಳೆದ 16 ವರ್ಷಗಳಲ್ಲೇ ಮುಂಚಿತವಾಗಿ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುತ್ತಿದೆ. ಮುಂದಿನ 24 ಗಂಟೆಯಲ್ಲಿ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯನ್ನು ನೀಡಿದೆ.
2009ರಲ್ಲಿ ಮೇ 23ರಂದೇ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಕೊಟ್ಟಿತ್ತು. ಈ ವರ್ಷ ಕೂಡ ಮುಂದಿನ 24 ಗಂಟೆಯಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ. ನಾಳೆ ಕೇರಳಕ್ಕೆ ಮಾನ್ಸೂನ್ ಮಾರುತ ಪ್ರವೇಶ ಮಾಡಿದ್ರೆ ಕರ್ನಾಟಕಕ್ಕೆ ಇನ್ನು 3 ದಿನದಲ್ಲಿ ಮುಂಗಾರು ಮಳೆ ಎಂಟ್ರಿ ಕೊಡುವ ಸಾಧ್ಯತೆ ಇದೆ. ಮೇ 27 ಅಥವಾ ಮೇ 28ರ ವೇಳೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಸಾಮಾನ್ಯವಾಗಿ ಕೇರಳದ ಬಳಿಕ ಜೂನ್ ಮೊದಲ ವಾರದಲ್ಲಿ ಮುಂಗಾರು ಮಾರುತ ರಾಜ್ಯವನ್ನು ಪ್ರವೇಶಿಸುವ ವಾಡಿಕೆ ಇದೆ. ಆದರೆ ಈ ಬಾರಿ 3-4 ದಿನಗಳು ಮುಂಚಿತವಾಗಿ ಮುಂಗಾರು ಆಗಮಿಸುವ ಮುನ್ಸೂಚನೆಯನ್ನು ರಾಜ್ಯ ಹವಮಾನ ಇಲಾಖೆ ನೀಡಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದಲೇ ಪೂರ್ವ ಮುಂಗಾರಿನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಈಗಾಗಲೇ ಒಂದು ವಾರಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ 3 ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುದಂತೆ ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ರೆ, ಇಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನ ಕೆಲವೆಡೆ ಇಂದು ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ರೆ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಅನ್ನ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

