ಬೆಂಗಳೂರು : ನಮ್ಮ ಸರಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

ನಮ್ಮ ಸರಕಾರದಲ್ಲಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯಲು ಸರಕಾರ ಮುಂದಾಗಿದೆ. ನಮ್ಮ ರಾಜ್ಯದಲ್ಲಿ ಎನ್ಆರ್ ಐಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿದ್ದರೆ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಈ ಸಚಿವಾಲಯ ಸಹಾಯವಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿರುವೆ. ಸಾರ್ವಜನಿಕರ ಕುಂದುಕೊರತೆಯ ಸಚಿವಾಲಯ ಆರಂಭಿಸಿ, ಜನರ ಅರ್ಜಿ, ವಿಚಾರಧಾರೆ, ಸಮಸ್ಯೆ ಆಲಿಸಲು ಪ್ರತ್ಯೇಕ ಸಚಿವರ ನೇಮಕ ಮಾಡಲಾಗುವುದು. ಪ್ರತಿ ನಿತ್ಯ ವಿವಿಧ ತಂಡಗಳು ಪ್ರತಿಭಟನೆ ನಡೆಸುತ್ತಿದ್ದು, ಅವರ ವಿಚಾರ ಆಲಿಸಿ, ಸ್ಪಂದಿಸಲು ಸರಕಾರ ಮುಂದಾಗಿದೆ ಎಂದರು.

ಎಲ್ಲಾ ರಾಜಕೀಯ ಪಕ್ಷಗಳಿಗೂ ಜನರ ಮತದಾನದ ಹಕ್ಕು ಉಳಿಸಿಕೊಳ್ಳುವ ಅವಕಾಶ ನೀಡಲಾಗುವುದು. ಕೇರಳಂ ರಾಜ್ಯ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ 90 ಲಕ್ಷ, 60 ಲಕ್ಷ ಜನರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಇದು ನಮ್ಮಲ್ಲಿ ಆಗಬಾರದು. ನಮ್ಮ ಸ್ಥಳೀಯ ಸಂಸ್ಥೆಗಳಲ್ಲಿ ನಿವಾಸ ಧೃಢೀಕರಣ ಪತ್ರ ನೀಡಲು ಅವಕಾಶವಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯವಿರುವ ಎಲ್ಲಾ ದಾಖಲೆ ನೀಡಬೇಕು ಎಂದರು.

“ನಿನ್ನೆ ನಾವು ಕೈಗೊಂಡಿರುವ ಆರು ತೀರ್ಮಾನಗಳ ಬಗ್ಗೆ ವರದಿ ಕೇಳಿದ್ದು, ಈ ತೀರ್ಮಾನಗಳನ್ನು ಜಾರಿಗೊಳಿಸುವ ಬಗ್ಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸುಮಾರು 8 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಯಾವ ಸಂಸ್ಥೆ ಯಾವ ಉದ್ದೇಶಕ್ಕೆ ವಿನಿಯೋಗಿಸುತ್ತಿದೆ ಎಂಬ ಮಾಹಿತಿ ಇಲ್ಲ. ಹೀಗಾಗಿ ನಮ್ಮ ರಾಜ್ಯದಲ್ಲಿ ಸಿಎಸ್ ಆರ್ ನಿಧಿ ಬಳಕೆಯಾಗುತ್ತಿದೆ ಎಂದು ಸರಕಾರಕ್ಕೆ ಮಾಹಿತಿ ನೀಡಬೇಕು.

ನಾವು ಈಗಾಗಲೇ ಸಿಎಸ್ಆರ್ ನಿಧಿಯಲ್ಲಿ ಪ್ರತಿ ಮೂರು ಗ್ರಾಮ ಪಂಚಾಯ್ತಿಗೆ ಒಂದರಂತೆ ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಸರ್ಕಾರ ಕೂಡ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಕ್ಷೇತ್ರಕ್ಕೆ ನಿಮ್ಮ ಸಿಎಸ್ಆರ್ ನಿಧಿ ಬಳಸಿ ಎಂದು ಮನವಿ ಮಾಡಿ ಪತ್ರ ಬರೆಯಲಾಗುವುದು. ಮುಂದಿನ ಐದಾರು ದಿನಗಳಲ್ಲಿ ಈ ಬಗ್ಗೆ ಸಂಪೂರ್ಣ ವಿವರ ನೀಡಲಾಗುವುದು. ಪ್ರಾಥಮಿಕ ಶಿಕ್ಷಣದ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ಈ ನಿಧಿ ಬಳಸಲಾಗುವುದು” ಎಂದು ವಿವರಿಸಿದರು.

ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಇವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟುಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿರುವೆ ಎಂದರು.

ಸಕಾಲ ವಿಚಾರದಲ್ಲಿ ಜನರಿಗೆ ಹೆಚ್ಚಿನ ಅನುಕೂಲವಾಗಬೇಕು. ಕರ್ನಾಟಕ ಭವನ ಕಾರ್ಯಾಚರಣೆಯಲ್ಲಿ ನನಗೆ ತೃಪ್ತಿಯಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗಿ, ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಸಭೆ ಮಾಡಿ ಕೆಲವು ವಿಭಾಗಗಳನ್ನು ರಚಿಸಲಾಗುವುದು. ದೆಹಲಿಯಲ್ಲಿರುವ ನಮ್ಮ ರಾಜ್ಯದ ಅಧಿಕಾರಿಗಳು, ರಾಜ್ಯದ ಯೋಜನೆಗಳ ಅನುಷ್ಠಾನಕ್ಕೆ ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಹೇಳಿದರು.