ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ ಎಂದು ತಿಳಿಸಿದೆ.
4 ರಾಜ್ಯಗಳಲ್ಲಿ 23 ಕಡೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಈ ವೇಳೆ ಅನೇಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದ ಇಡಿ ಬುಧವಾರ ಮಾಹಿತಿ ಬಹಿರಂಗಪಡಿಸಿದೆ.
ಈ ಪ್ರಕರಣದಲ್ಲಿ ಸುಮಾರು 90 ಕೋಟಿ ರೂ.ಗಳಷ್ಟು ಅಕ್ರಮ ಮಾಡಲು 18 ನಕಲಿ ಬ್ಯಾಂಕ್ ಖಾತೆಗಳನ್ನ ಬಳಸಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಯಲ್ಲಿ ಮದ್ಯ ಖರೀದಿ ಮಾಡಲು ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬಿ.ಎನ್ ನಾಗೇಂದ್ರ ಮತ್ತು ದದ್ದಲ್ ಅವರ ಮನೆಯಲ್ಲಿ ಕೆಲ ಪ್ರಮುಖ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಕೂಡ ಭಾಗಿ ಆಗಿದ್ದಾರೆ ಅಂತ ಇಡಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 26ರಂದು ನಿಗಮದ ಉದ್ಯೋಗಿ ಚಂದ್ರಶೇಖರನ್ ಆತ್ಮಹತ್ಯೆಯ ಬಳಿಕ ರಾಜ್ಯ ಪೊಲೀಸರು ಹಾಗೂ ಸಿಬಿಐ ದಾಖಲಿಸಿದ್ದ ಎಫ್ಐಆರ್ಗಳ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು. ಅಕ್ರಮದ ಬೆನ್ನತ್ತಿ ಹೊರಟಾಗ ಗಣನೀಯ ಪ್ರಮಾಣದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಲಾಗಿದೆ.
ಇದರೊಂದಿಗೆ ಅಕ್ರಮದಲ್ಲಿ ಬಂದ ಇತರೇ ಹಣವನ್ನು ಬಳಸಿಕೊಂಡು ಲ್ಯಾಂಬೋರ್ಗಿನಿ ಸೇರಿದಂತೆ ಐಷಾರಾಮಿ ವಾಹನಗಳನ್ನು ಖರೀದಿಸಲಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಮಾಜಿ ಸಚಿವ ನಾಗೇಂದ್ರ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ನಗದು ನಿರ್ವಹಣೆಯಲ್ಲಿ ತೊಡಗಿದ್ದ ಸಹವರ್ತಿಗಳ ಬಗ್ಗೆಯೂ ಮಾಹಿತಿ ಬಯಲಾಗಿದೆ. ಅಷ್ಟೇ ಅಲ್ಲದೇ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ನಿವಾಸದಲ್ಲಿ ಅಕ್ರಮ ಹಣ ನಿರ್ವಹಣೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ.
ಆ ನಂತರ ನಾಗೇಂದ್ರ ಅವರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಜು.18ರ ವರೆಗೆ ಇಡಿ ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

