ರಾಮನಗರ: ಡೆಂಗ್ಯೂ ಜ್ವರದಿಂದ ಮಾಗಡಿಯ ಕುದೂರು ಪಟ್ಟಣದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.

ಪಟ್ಟಣದ ಮಹಾತ್ಮನಗರ ಬಡಾವಣೆಯ ಸುರೇಶ್ ಹಾಗೂ ನಳಿನ ದಂಪತಿಯ ಪುತ್ರಿ ಹೇಮಾ (19) ಮೃತ ಯುವತಿ. ಪ್ರಥಮ ಬಿ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಳು.

ಇದರ ಜೊತೆಗೆ ಕಳೆದ 15 ದಿನಗಳಿಂದ ಡೆಂಗ್ಯೂವಿನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ.

ಡೆಂಗ್ಯೂನಿಂದ ಯುವತಿ ಸಾವನ್ನಪ್ಪಿದ ಹಿನ್ನೆಲೆ ಕುದೂರಿಗೆ ತಾಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಡಾವಣೆ ಸುತ್ತಮುತ್ತ ಸ್ವಚ್ಚತಾ ಕಾರ್ಯ ನಡೆಸಿ, ಸೊಳ್ಳೆ ಉತ್ಪತಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದ್ದಾರೆ.