ಬೆಳ್ತಂಗಡಿ: ನಮ್ಮ ಪ್ರಕೃತಿ ಪರಿಸರದ ಮೇಲೆ ಎಲ್ಲರಿಗೂ ಹೊಣೆಗಾರಿಕೆ ಇದ್ದು ಇದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರದ್ದೂ ಆಗಿದೆ ಎಂದು ಉಜಿರೆ ಎಸ್ ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಉದಯಚಂದ್ರ ಹೇಳಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗವು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ವಿಭಾಗದ ಮುಖ್ಯಸ್ಥ ಡಾ.ಬಿ.ಎ ಕುಮಾರ್ ಹೆಗಡೆ ಅವರು ಅಧ್ಯಕ್ಷತೆ ವಹಿಸಿ ಪರಿಸರದ ವಿವಿಧ ನೆಲೆಗಳನ್ನು ಹಾಗೂ ಅವುಗಳನ್ನು ಸಂರಕ್ಷಿಸಲು ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳನ್ನು ಅರ್ಥಪೂರ್ಣವಾಗಿ ವಿವರಿಸಿದರು.
ವಿಭಾಗದ ಪ್ರೊ.ಶಕುಂತಲಾ ಅವರು ಸ್ವಾಗತಿಸಿ, ಪ್ರಸನ್ನಕುಮಾರ್ ಅವರು ವಂದಿಸಿದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂಬಂಧಿ ವಿಷಯಗಳ ಬಗ್ಗೆ ಪ್ರಬಂಧಗಳನ್ನು ಮಂಡಿಸಿದರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಯಿತು.