ಉಜಿರೆ:“ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ. ಎಂದು ಶ್ರೀ.ಧ.ಮಂ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಸತೀಶ್ಚಂದ್ರ ಹೇಳಿದರು.
ಕಾಲೇಜಿನ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ ಕೇವಲ 27% ಯುವಜನತೆ ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಾರೆ ಉಳಿದವರು ಈ ಅವಕಾಶಗಳಿಂದ ವಂಚಿತರಾಗಿದ್ದಾರೆ. ಕಾಲೇಜಿನಲ್ಲಿ ಅನೇಕ ಅವಕಾಶಗಳನ್ನು ಒದಗಿಸುತ್ತಿದ್ದು ವಿದ್ಯಾರ್ಥಿಗಳು ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು” ಎಂದು ಹೇಳಿದರು.
ಸ್ನಾತಕೋತ್ತರ ವಿಭಾಗದ ಡಿನ್ ಡಾ. ಪಿ. ವಿಶ್ವನಾಥ್ ಅವರು ನೆರೆದಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹೊಸ ಶಿಕ್ಷಣ ನೀತಿಯ ಕಾರ್ಯವೈಖರಿ, ಕಾಲೇಜಿನ ಸ್ವಾಯತ್ತತೆ, ಪರೀಕ್ಷಾ ವಿಧಾನಗಳ ಕುರಿತಾಗಿ ಮಾಹಿತಿಯನ್ನು ನೀಡಿದರು. “ಹೊಸ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳು ಜಾಗತಿಕಮಟ್ಟದಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ರೂಪಿಸಲಾಗಿದೆ.” ಎಂದು ನುಡಿದರು.
ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಹೆಗ್ಡೆ ಕಾಲೇಜಿನಲ್ಲಿ ನಡೆಯುವ ಚಟುವಟಿಕೆ, ಸೌಲಭ್ಯ, ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. “ಗ್ರಾಮೀಣ ಪ್ರದೇಶದವರೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಭಾಗವಹಿಸುತ್ತಿದ್ದಾರೆ. ಹೀಗಾಗಿ ಸ್ಪರ್ಧಾತ್ಮಕ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಬಹುಮುಖ್ಯ” ಎಂದು ಅಭಿಪ್ರಾಯಪಟ್ಟರು. ಪತ್ರಿಕೋದ್ಯಮ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ‘ಫೋಟೊ ಜರ್ನಲ್’ ಅನ್ನು ಇದೇ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಮನಃಶಾಸ್ತ್ರ ವಿಭಾಗದ ಅಧ್ಯಾಪಕ ಡಾ. ಸುಧೀರ್ ಹಾಗು ಇತರೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಡಾ. ರಾಜಶೇಖರ್ ಸ್ವಾಗತಿಸಿ, ಪ್ರೋ. ಜಿ.ಆರ್ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.