ಮಂಗಳೂರು: ನಗರದ ಹೃದಯಭಾಗದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ 118ನೇ ಕಾಲೇಜು ವಾರ್ಷಿಕೋತ್ಸವವನ್ನು ಜೂನ್ 24 ರಂದು ಆಯೋಜಿಸಲಾಗಿದೆ. ಪೂರ್ವಭಾವಿಯಾಗಿ ಕಾಲೇಜಿನ ಪ್ರತಿಭಾ ದಿನಾಚರಣೆ ಜೂನ್ 23 ರಂದು ನಡೆಯಲಿದೆ.
ಲಲಿತ ಕಲಾ ಸಂಘದಿಂದ ಆಯೋಜಿಸಲ್ಪಡುವ ಪ್ರತಿಭಾ ದಿನಾಚರಣೆಯನ್ನು ಖ್ಯಾತ ತೆಂಕುತಿಟ್ಟು ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಶುಕ್ರವಾರ ಮುಂಜಾನೆ 9.30 ಕ್ಕೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉದ್ಘಾಟಿಸಲಿದ್ದಾರೆ. ಪತ್ರಕರ್ತ ಶ್ರೀಕಾಂತ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾಲೇಜಿನ ಪ್ರಮುಖ ಆಕರ್ಷಣೆಯಾಗಿರುವ ಕಾಲೇಜು ವಾರ್ಷಿಕೋತ್ಸವ ಶನಿವಾರ ಮುಂಜಾನೆ 10 ಗಂಟೆಗೆ ಆರಂಭಗೊಳ್ಳಲಿದೆ. ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ವಿಶ್ರಾಂತ ನಿರ್ದೇಶಕ ಡಾ. ಕೆ ಪಿ ಪುತ್ತೂರಾಯ ಮುಖ್ಯ ಅತಿಥಿಯಾಗಿರಲಿದ್ದಾರೆ. ನಿವೃತ್ತ ಪೊಲೀಸ್ ಅಧೀಕ್ಷಕ (ಸೆಲೆಕ್ಷನ್ ಗ್ರೇಡ್) ರಾಮದಾಸ ಗೌಡ ಎಸ್. ತಮ್ಮ ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಹಂಚಿಕೊಳ್ಳಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಪ್ರದರ್ಶನಗೊಳ್ಳಲಿದೆ.
ಪ್ರಾಂಶುಪಾಲೆ ಡಾ. ಅನಸೂಯ ರೈ, ವಿದ್ಯಾರ್ಥಿ ಸಂಘದ ಉಪ ನಿರ್ದೇಶಕಿ ಪ್ರೊ. ಲತಾ ಎ. ಪಂಡಿತ್, ಲಲಿತ ಕಲಾ ಸಂಘದ ಸಹ ನಿರ್ದೇಶಕಿ ಡಾ. ಮೀನಾಕ್ಷಿ ಎಂ. ಎಂ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಜನ್ ವಿ. ಶೆಟ್ಟಿ, ಕಾರ್ಯದರ್ಶಿ ತಶ್ವಿತ್ ಎ, ಸಹ ಕಾರ್ಯದರ್ಶಿನಿ ಯಶಸ್ವಿ ಕೆ, ಲಲಿತ ಕಲಾ ಸಂಘದ ಕಾರ್ಯದರ್ಶಿನಿ ಪ್ರತೀಕ್ಷಾ ಪಿ, ಸಹ ಕಾರ್ಯದರ್ಶಿನಿ ಶರಣ್ಯ ಪಿ, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ.