ಮಂಗಳೂರು: ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ 2022 -23 ನೇ ಸಾಲಿನ ಶೈಕ್ಷಣಿಕ ವರ್ಷದ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು ಹಾಗೂ ದೀಪವನ್ನು ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಸಹಕುಲಾಧಿಪತಿಗಳಾದ ಡಾ. ಎ.ಶ್ರೀನಿವಾಸ್ ರಾವ್, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ. ಎಸ್. ಐತಾಳ್, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲ್ ಕುಮಾರ್, ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಡಾ. ಶ್ರೀನಿವಾಸ ಮಯ್ಯ ಡಿ., ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ಥಾಮಸ್ ಪಿಂಟೋ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ಸಂತೋಷ್ ಶಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಥಾಮಸ್ ಪಿಂಟೋ ರವರು ಸ್ವಾಗತ ಭಾಷಣವನ್ನು ಮಾಡಿದರು ಹಾಗೂ ಶೈಕ್ಷಣಿಕ ವಿಷಯಗಳು, ಉದ್ಯೋಗಾವಕಾಶಗಳು, ಕೌಶಲ್ಯಾಭಿವೃದ್ಧಿ ತರಬೇತಿಗಳು, ಸ್ಟಾರ್ಟ್ ಅಪ್ ಸೌಲಭ್ಯಗಳು, ವಾಚನಾಲಯ ಸೌಲಭ್ಯ, ವಿದ್ಯಾರ್ಥಿಗಳ ಸಂಘಟನೆ ಮತ್ತು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಇನ್ನಿತರ ಹಲವಾರು ಮೌಲ್ಯವರ್ಧಿತ ಸೌಲಭ್ಯಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.
ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ. ಎಸ್. ಐತಾಳ್ ರವರು ಮಾತನಾಡಿ, ಶ್ರೀನಿವಾಸ ವಿಶ್ವವಿದ್ಯಾಲಯವು ಬೆಳೆದು ಬಂದ ಹಾದಿಯ ಕಿರುಚಿತ್ರಣವನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನೀಡಿದರು. ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು, ಶ್ರೀನಿವಾಸ ವಿಶ್ವವಿದ್ಯಾಲಯದ ಧ್ಯೇಯ, ವಿದ್ಯಾರ್ಥಿಗಳ ಪೋಷಕರ ಹಾಗೂ ಶಿಕ್ಷಕರ ಪಾತ್ರಗಳು ಮತ್ತು ಜವಾಬ್ದಾರಿಗಳು, ಯಶಸ್ವಿ ಇಂಜಿನಿಯರ್ ಆಗಿ ರೂಪುಗೊಳ್ಳುವ ವಿಧಾನ, ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ನೀಡಲಾಗುತ್ತಿರುವ ಪ್ರೋತ್ಸಾಹಗಳ ಕುರಿತು ಮಾಹಿತಿಯನ್ನು ನೀಡಿದರು. ಜಗತ್ತಿನ ಅತ್ಯಂತ ಯಶಸ್ವಿ ಉದ್ಯಮಿ, ಹೂಡಿಕೆದಾರ, ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲಾನ್ ಮಸ್ಕ್ ರವರ ಉದಾಹರಣೆಯನ್ನು ನೀಡಿದ ಅವರು, ಇಂದಿನ ಇಂಜಿನಿಯರ್ಗಳು ಉದಯೋನ್ಮುಖ ತಂತ್ರಜ್ಞಾನದಲ್ಲಿ ಉತ್ತಮ ಕೊಡುಗೆಯನ್ನು ನೀಡಿ ಸಮಾಜದಲ್ಲಿನ ಸಮಸ್ಯೆಗಳಾದ ಮೂಲಭೂತ ಅವಶ್ಯಕತೆಗಳು, ಪೌಷ್ಟಿಕ ಆಹಾರ, ಕುಡಿಯುವ ನೀರು, ವಸತಿ, ಕೈಗೆಟುಕುವ ಆರೋಗ್ಯ ಸೌಲಭ್ಯಗಳು ಮುಂತಾದ ಸಮಸ್ಯೆಗಳಿಗೆ ಅತ್ಯಂತ ಕಡಿಮೆ ವೆಚ್ಚದ ಕೈಗೆಟುಕುವ ಪರಿಹಾರವನ್ನು ಒದಗಿಸಬೇಕು. ಬಾಹ್ಯಾಕಾಶ, ವರ್ಚುವಲ್ ರಿಯಾಲಿಟಿ, ಮುಂತಾದ ಕ್ಷೇತ್ರಗಳಲ್ಲಿ ನಮ್ಮ ವಿದ್ಯಾರ್ಥಿಗಳು ಭವಿಷ್ಯದ ಸೂಪರ್ ನಾವೀನ್ಯಕಾರರಾಗಬೇಕು ಎಂದು ಹೇಳಿದರು.
ಉದ್ಘಾಟನಾ ಭಾಷಣವನ್ನು ಮಾಡಿದ ಮುಖ್ಯ ಅತಿಥಿಗಳಾದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ರವರು ಮಾತನಾಡಿ, ದೇಶದ ಆರ್ಥಿಕತೆಯ ಅಭಿವೃದ್ಧಿ ಹಾಗೂ ಪ್ರಗತಿಯು ಉನ್ನತ ತಂತ್ರಜ್ಞಾನ ಮತ್ತು ಇಂಜಿನಿಯರ್ ಗಳಿಂದ ಸಾಧ್ಯ ಎಂದು ಹೇಳಿದರು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ವಿಶ್ವವಿದ್ಯಾಲಯದಲ್ಲಿ ನವೀನ ಮಾದರಿಯ ಶೈಕ್ಷಣಿಕ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ಭಾರತ ಸರ್ಕಾರವು ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಪಠ್ಯಕ್ರಮವನ್ನು ರೂಪಿಸಲಾಗಿದೆ. ಬಹು ಕೌಶಲ್ಯ ಶಿಕ್ಷಣ ಪದ್ಧತಿಯನ್ನು ಅಳವಡಿಸಲಾಗಿದೆ. ಇದು ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಹೇಳಿದರು. ನಮ್ಮ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಇಂಟರ್ನಿಶಿಪ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನಮ್ಮ ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿಯಲ್ಲಿ ಹೆಸರಾಂತ ಸಂಸ್ಥೆಗಳ ಅನುಭವಿ ತಂತ್ರಜ್ಞರನ್ನು ಸೇರಿಸಿಕೊಳ್ಳುವುದರ ಮೂಲಕ ಉತ್ತಮ ಗುಣಮಟ್ಟದ ಪಠ್ಯಕ್ರಮವನ್ನು ರಚಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯವನ್ನು ಅಳೆಯಲು ನಮ್ಮ ಸಂಸ್ಥೆಯ ಅನುಭವಿ ಉಪನ್ಯಾಸಕರ ಮೂಲಕ ಕೌಶಲ್ಯ ಮತ್ತು ಪ್ರಾಯೋಗಿಕ ಆಧಾರಿತ ನಿರಂತರ ಮೌಲ್ಯಮಾಪನ ಪದ್ಧತಿಯನ್ನು ಅಳವಡಿಸಲಾಗಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ನಮ್ಮ ಸಂಸ್ಥೆಯಲ್ಲಿ ಕಲಿತ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಾರ್ಷಿಕ ಹತ್ತು ಲಕ್ಷಕ್ಕೂ ಅಧಿಕ ವೇತನದ ಉತ್ತಮ ಉದ್ಯೋಗಾವಕಾಶಗಳು ದೊರೆತಿವೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದಲ್ಲಿ ಕಲಿಯುತ್ತಿರುವ 93 ಶೇಕಡಾ ವಿದ್ಯಾರ್ಥಿಗಳಿಗೆ ಈಗಾಗಲೇ ಉತ್ತಮ ಉದ್ಯೋಗಾವಕಾಶಗಳು ದೊರೆತಿವೆ. ಭವಿಷ್ಯದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಮಾಜದ ಹಾಗೂ ದೇಶದ ಅತ್ಯಂತ ಜವಾಬ್ದಾರಿಯುತ ಇಂಜಿನಿಯರಿಂಗ್ ಪದವೀಧರರಾಗಿ ರೂಪುಗೊಳ್ಳಲಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತಾಗಬೇಕು ಎಂದು ಆಶಿಸಿದರು ಹಾಗೂ ಶುಭವನ್ನು ಕೋರಿದರು.
ಅಧ್ಯಕ್ಷೀಯ ಭಾಷಣವನ್ನು ಮಾಡಿದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು ಮಾತನಾಡಿ, ಜನಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಜ್ಞಾನವನ್ನು ನೀಡುವ ಮತ್ತು ಸಾರ್ವಜನಿಕರಲ್ಲಿ ಜ್ಞಾನದ ಮಟ್ಟವನ್ನು ಹೆಚ್ಚಿಸುವುವ ಉದ್ದೇಶದಿಂದ ಇಂಜಿನಿಯರಿಂಗ್ ಕಾಲೇಜನ್ನು ಪ್ರಾರಂಭಿಸಲಾಯಿತು ಎಂದು ಹೇಳಿದರು. ಸಮಾಜದಲ್ಲಿ ಹೆಚ್ಚು ಸಕಾರಾತ್ಮಕತೆಯನ್ನು ಪಡೆಯುವುದು ನಮ್ಮ ಉದ್ದೇಶ. ಇದಕ್ಕಾಗಿ ವಿದ್ಯಾರ್ಥಿಗಳು ಇನ್ನು 4 ವರ್ಷಗಳ ಕಾಲ ಶೈಕ್ಷಣಿಕ ತಪಸ್ಸನ್ನು ಮಾಡಬೇಕಿದೆ. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಮೂಲಕ 4 ವರ್ಷಗಳ ಬಿ.ಟೆಕ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ ನಂತರ ನಿಮ್ಮ ಪ್ರಯತ್ನವು ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಇದು ಹೊಸತನಕ್ಕೆ ಕಾರಣವಾಗುತ್ತದೆ. ಇದಕ್ಕೆ ಪೂರಕವಾಗಿ, ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಕೈಗಾರಿಕಾ ಬೇಡಿಕೆಗಳಿಗೆ ಅನುಗುಣವಾಗಿ ಪಠ್ಯಕ್ರಮದಲ್ಲಿ ನವೀನ ತಂತ್ರಜ್ಞಾನವನ್ನು ಸೇರಿಸುವ ಮೂಲಕ ಪ್ರತಿ ವರ್ಷಕ್ಕೊಮ್ಮೆ ಪಠ್ಯಕ್ರಮವನ್ನು ಪರಿಷ್ಕರಿಸುತ್ತೇವೆ. ಇದು ನಮ್ಮ ವಿದ್ಯಾರ್ಥಿಗಳನ್ನು ವೃತ್ತಿಜೀವನದಲ್ಲಿ ಉತ್ಕೃಷ್ಟರಾಗಲು ಮತ್ತು ಯಶಸ್ಸನ್ನು ಹೊಂದಲು ಸಹಾಯ ಮಾಡುತ್ತದೆ. ಸಮಾಜದಲ್ಲಿ ಹಾಗೂ ಪ್ರಸಕ್ತ ಉದ್ಯಮ ಕ್ಷೇತ್ರದಲ್ಲಿ ಇರುವ ಅವಶ್ಯಕತೆಗಳಿಗೆ ಅನುಗುಣವಾಗಿ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನವನ್ನು ಕಲಿಸಲಾಗುತ್ತಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಾಷ್ಟ್ರದ ನಿರ್ಮಾಣದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಾರೆ. ನಮ್ಮ ವಿದ್ಯಾರ್ಥಿಗಳು ಭವಿಷ್ಯದ ಉದ್ಯಮಿಗಳಾಗಿ ರೂಪುಗೊಳ್ಳಲು ತರಬೇತಿಯನ್ನು ನೀಡುತ್ತೇವೆ, ಅವರು ಇತರರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಾರೆ. ಈ ಮೂಲಕ ದೇಶದ ಆರ್ಥಿಕತೆಗೆ ಮತ್ತು ರಾಷ್ಟ್ರದ ನಿರ್ಮಾಣಕ್ಕೆ ಉತ್ತಮ ಕೊಡುಗೆಯನ್ನು ನೀಡಿದಂತಾಗುತ್ತದೆ. ನಮ್ಮ ಉದ್ದೇಶ ಕೇವಲ ಜ್ಞಾನವನ್ನು ನೀಡುವುದಲ್ಲ. ನಮ್ಮ ವಿದ್ಯಾರ್ಥಿಗಳನ್ನು ಈ ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ನಾವು ಸಮಾನ ತರಬೇತಿಯನ್ನು ನೀಡುತ್ತೇವೆ. ನಮ್ಮ ವಿದ್ಯಾರ್ಥಿಗಳು ಸಮಾಜದ ಉತ್ತಮ ನಾಯಕರಾಗಬೇಕು. ನಾಲ್ಕು ವರ್ಷಗಳ ಎಂಜಿನಿಯರಿಂಗ್ ಶಿಕ್ಷಣವು ನಿಮ್ಮ ವೃತ್ತಿಜೀವನಕ್ಕೆ ದೃಢವಾದ ಅಡಿಪಾಯವನ್ನು ಒದಗಿಸುತ್ತದೆ. ವಿದ್ಯಾರ್ಥಿಗಳು ಹೆಚ್ಚು ಜ್ಞಾನವನ್ನು ಪಡೆದುಕೊಂಡು ತಮ್ಮ ಕೌಶಲ್ಯಗಳನ್ನು ಉತ್ಕೃಷ್ಟಗೊಳಿಸಬೇಕು. ಹೆತ್ತವರ ಬೆಂಬಲ ಮತ್ತು ಉಪನ್ಯಾಸಕರ ಸಹಯೋಗವು ವಿದ್ಯಾರ್ಥಿಗಳಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಡಾ. ಸಿಎ ಎ ರಾಘವೇಂದ್ರ ರಾವ್ ರವರು ಹೇಳಿದರು ಹಾಗೂ ನೂತನ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ವಿದ್ಯಾರ್ಥಿನಿ ಸಿಮಿ ಸತೀಶ್ ಮತ್ತು ಶ್ರೀಜಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಹೆತ್ತವರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.