ಮಂಗಳೂರು: ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಾಧಾರಿತ ಚಿಂತನೆಯನ್ನು ಬೆಳೆಸಿ ಅವರನ್ನು ನವಸಮಾಜ ನಿರ್ಮಾಣದ ಸದೃಢ ವ್ಯಕ್ತಿಗಳನ್ನಾಗಿ ಪರಿವರ್ತಿಸುವಲ್ಲಿ ಶಿಕ್ಷಕರ ಕಾರ್ಯ ಅಪಾರ. ನೈಜ ಗುರುಪರಂಪರೆಯ ವ್ಯಕ್ತಿಯು ಶಿಷ್ಯ ವರ್ಗದವರಲ್ಲಿ ಮೌಲ್ಯಗಳನ್ನು ಬೆಳೆಸಿದಾಗ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ರವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿಯ ವತಿಯಿಂದ ಮಂಗಳೂರಿನ ಸೈಂಟ್ ಅಲೋಶಿಯಸ್ ಪ್ರೌಢಶಾಲೆ ಕೊಡಿಯಾಲಬೈಲ್ ಇಲ್ಲಿ ಆಯೋಜಿಸಲಾಗಿದ್ದ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಶಾಲಾದಿನಗಳಲ್ಲಿ ತನ್ನ ಮೇಲೆ ಪ್ರಭಾವ ಬೀರಿದ ಶಿಕ್ಷಕರ ಕಾಳಜಿಯನ್ನು ನೆನಪಿಸಿಕೊಂಡರು.
ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ರವರು ಶಿಕ್ಷಕರು ನವ ಸಮಾಜದ ನಿರ್ಮಾಣದ ರೂವಾರಿಗಳನ್ನು ಹುಟ್ಟುಹಾಕಲು ಕಾರಣೀಕರ್ತರಾದವರು, ಬಾಲ್ಯದಲ್ಲಿ ತನಗೆ ಮೊದಲ ವೇದಿಕೆಯನ್ನು ಒದಗಿಸಿಕೊಟ್ಟು ತನ್ನ ಏಳಿಗೆಗೆ ಕಾರಣವಾದವರು ಶಿಕ್ಷಕರು ಎಂದು ಅಭಿಪ್ರಾಯಪಟ್ಟರು.
ಉಡುಪಿ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾಗಿರುವ ಡಾ। ಸಿ ಕೆ ಮಂಜುನಾಥ್ ರವರು ದಿಕ್ಸೂಚಿ ಭಾಷಣಗೈದರು. ಸಂತ ಅಲೋಶಿಯಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಂಚಾಲಕರಾದ ರೆ।ಫಾ। ಜೆರಾಲ್ಡ್ ಫುರ್ಟಾಡೊ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 2022-23 ನೇಸಾಲಿನಲ್ಲಿ ನಿವೃತ್ತರಾದ ಸುಮಾರು 46 ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಿಶೇಷ ಸಾಧನೆಗೈದ ಉತ್ತರ ವಲಯದ ಐವರು ಶಿಕ್ಷಕರನ್ನು ಅಭಿನಂದಿಸಲಾಯಿತು. ವಲಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ಪಡೆದ ಇಪ್ಪತ್ತು ಶಾಲೆಗಳನ್ನು ಅಭಿನಂದನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಕಳೆದ ಸಾಲಿನಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಮೂವರು ಶಿಕ್ಷಕರನ್ನು ಸಮ್ಮಾನಿಸಲಾಯಿತು.
ವೇದಿಕೆಯಲ್ಲಿ ಡಯಟ್ ನ ಹಿರಿಯ ಉಪನ್ಯಾಸಕರಾದ ಆ್ಯಂಡ್ರ್ಯೂ ಕುಟಿನೋ ಉಪನ್ಯಾಸಕರುಗಳಾದ ಪಿತಾಂಬರ ಹಾಗೂ ವಿನೋದಾ ಮತ್ತು ಸವಿತಾ ನಾಯಕ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ, ಮಂಗಳೂರು ತಾಲ್ಲೂಕು ಉತ್ತರ ವಲಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ರಾವ್, ದಕ್ಷಿಣ ಕನ್ನಡ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಮಮತಾ ಜಿ ಐತಾಳ್, ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯರಾಮ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಹರೀಶ್ ರೈ ಹಾಗೂ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೆಲುವಮ್ಮ, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಉಮೇಶ್, ಪ್ರೌಢಶಾಲಾ ಭಡ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರೇಮ್ ನಾಥ್ ಮರ್ಣೆ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಂದರ ತೋಡಾರು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಂಬರೀಶ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಶಿಕ್ಷಕರ ವಿಭಾಗದ ಪದಾಧಿಕಾರಿ ಶೆರ್ಲಿ ಸುಮಾಲಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜ ಸ್ವಾಗತಿಸಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಉಸ್ಮಾನ್ ಜಿ ವಂದಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ. ಮಂಜುಳಾ ಶೆಟ್ಟಿ ಹಾಗೂ ಪ್ರೌಢಶಾಲಾ ಶಿಕ್ಷಕಿ ಚಿತ್ರಾಶ್ರೀ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಲಯದ ಶಿಕ್ಷಕರು ಪ್ರಸ್ತುತಪಡಿಸಿದರು.