ಬೀದರ್: ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು. ಹೊಸದನ್ನು ಹುಡುಕಲು ಪ್ರಯತ್ನಿಸಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್ ಹೇಳಿದರು.
ನಗರದ ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶನಿವಾರ (ಜ. 6) ಆಯೋಜಿಸಿದ್ದ ವಿಜ್ಞಾನ ಹಾಗೂ ಕಲಾ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸೃಜನಶೀಲತೆ ಬೆಳೆಸಿಕೊಳ್ಳಬೇಕು. ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು. ಹೀಗಾದಾಗ ವ್ಯಕ್ತಿ ವಿಕಾಸವಾಗುತ್ತದೆ ಎಂದು ತಿಳಿಸಿದರು.
ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಾಬುರಾವ್ ದಾನಿ ಮಾತನಾಡಿ, ಯಾವುದೇ ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪಾತ್ರ ಬಹಳ ಮಹತ್ವದ್ದಾಗಿದೆ. ಕಾಲಕಾಲಕ್ಕೆ ಅದರಲ್ಲಿ ಬದಲಾವಣೆ ಆಗುತ್ತದೆ. ಅದಕ್ಕೆ ತಕ್ಕಂತೆ ನಮ್ಮ ಜ್ಞಾನಾರ್ಜಾನೆ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ವಸ್ತು ಪ್ರದರ್ಶನಗಳು ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುತ್ತವೆ ಎಂದು ತಿಳಿಸಿದರು.
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಮಟ್ಟದ ಎಚ್.ಎನ್. ಪ್ರಶಸ್ತಿ ಪುರಸ್ಕೃತ ಶಿವಕುಮಾರ ಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕರಾದ ಈಶ್ವರಿ ಬೇಲೂರೆ, ಬಸವರಾಜ ಮುಗುಟಾಪುರೆ, ಹಾರೂರಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಮಲಾ, ಪ್ರೇರಣಾ ಪಬ್ಲಿಕ್ ಶಾಲೆಯ ಅರುಣಾ ಪಾಟೀಲ, ಸುಹಾಸಿನಿ, ಸಂಗೀತಾ, ಜ್ಯೋತಿ, ಸುವರ್ಣಾ, ಶೋಭಾ, ಶ್ರೀಲಾ, ಮನಕರ್ಣಾದೇವಿ, ಶ್ರೀನಿವಾಸ, ಮೀನಾಕ್ಷಿ ಗಾಯಕವಾಡ, ಶೋಭಾವತಿ, ಅಲ್ಕಾವತಿ ಹಾಜರಿದ್ದರು. ಮಕ್ಕಳು ಸ್ವತಃ ಸಿದ್ಧಪಡಿಸಿ ಪ್ರದರ್ಶನಕ್ಕೆ ಇಟ್ಟಿದ್ದ ವಿವಿಧ ಮಾದರಿಗಳು ಗಮನ ಸೆಳೆದವು.