ತುಮಕೂರು: ಸಧೃಡ ಭಾರತಕ್ಕೆ ಯುವಜನತೆಯನ್ನು ಸಜ್ಜುಗೊಳಿಸಬೇಕಿದೆ. ಅಧ್ಯಾಪಕರು ಈ ಉದ್ದೇಶವನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಶ್ರೇಷ್ಠ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವುದು ಸಾಧ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಲವಾರು ಪ್ರಾಣತ್ಯಾಗ, ಬಲಿದಾನಗಳಿಂದ ಲಭಿಸಿದ್ದು ಈ ಸ್ವಾತಂತ್ರ್ಯ. ಅದನ್ನು ಕಾಪಾಡಿಕೊಳ್ಳುವ ಹೊಣೆ ನಮ್ಮ ಮೇಲಿದೆ ಎಂದರು.
ವಿಶ್ವವಿದ್ಯಾಲಯಗಳು ಜ್ಞಾನ ದೇಗುಲಗಳು, ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವಲ್ಲಿ ಇವುಗಳ ಪಾತ್ರ ಅತಿ ದೊಡ್ಡದು. ವಿಶ್ವವಿದ್ಯಾಲಯಗಳು ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಬೇಕಿದೆ. ದೇಶದ ಅಭಿವೃದ್ಧಿಗಾಗಿ ನಾವೆಲ್ಲರು ಒಗ್ಗಟ್ಟಿನಿಂದ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದರು.
ಕುಲಸಚಿವ ಪ್ರೊ. ಕೆ. ಶಿವಚಿತ್ತಪ್ಪ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ವೀರರನ್ನು ಸ್ಮರಿಸುವ ದಿನ ಇಂದು. ಅಂತಹ ವೀರರಿಗೆ ಗೌರವ ಸಮರ್ಪಣೆ ಮಾಡುವುದೇ ಈ ದಿನದ ವಿಶೇಷ. ಭವಿಷ್ಯದ ಬೆಳವಣಿಗೆಗೆ ಭಾರತವು ಹೊಸ ಶಕ್ತಿಯನ್ನು ಪಡೆದುಕೊಳ್ಳುತ್ತಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಇತಿಹಿಸವನ್ನು ದಾಖಲಿಸುವಲ್ಲಿ ದೇಶದ ಪ್ರಯತ್ನಗಳನ್ನು ಪೂರೈಸುವ ಹೊಣೆಗಾರಿಕೆಯನ್ನು ಯುವಜನತೆ ಹಾಗೂ ವಿದ್ವಾಂಸರಿಗೆ ಸಹಾಯ ಮಾಡಲು ಅಮೃತ ಮಹೋತ್ಸವ ಸಹಾಯವಾಗಲಿದೆ ಎಂದರು.
ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎ. ಎಂ. ಮಂಜುನಾಥ ವಂದಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.