ಚಿತ್ರದುರ್ಗ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬಳೆಕಟ್ಟೆ ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಅಂಬುಲೆನ್ಸ್‌ನಲ್ಲಿದ್ದ ಶಿವಬಸವ ಸಂಬಂಧಿ ಸರೋಜಮ್ಮ (52) ಸಾವನ್ನಪ್ಪಿದ್ದಾರೆ. ಅಲ್ಲದೇ ಅಂಬುಲೆನ್ಸ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.