ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ಬುಧವಾರ ಮುಂಜಾನೆ ಭುವನೇಶ್ವರದಿಂದ ಬೆಂಗಳೂರಿಗೆ ಬಂದಿದ್ದ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜನಿಸಿದ ನಾಲ್ಕೈದು ಗಂಟೆಯಲ್ಲೇ ಗಂಡು ಮಗುವೊಂದು ನರಳಾಡಿ ಪ್ರಾಣ ಬಿಟ್ಟಿದೆ. ಪಾಪಿ ತಾಯಿಯೊಬ್ಬಳು ರೈಲಿನಲ್ಲೇ ಹೆರಿಗೆಯಾಗಿ ಡಸ್ಟ್ ಬಿನ್‌ನಲ್ಲೇ ಶಿಶುವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಅಮಾನವೀಯ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕ್ರೂರಿ ತಾಯಿಯೊಬ್ಬಳು ಗಂಡು ಮಗುವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಕಸದ ಬುಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ. ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹ ಕಂಡ ಪ್ರಯಾಣಿಕರೊಬ್ಬರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಯಶವಂತಪುರ ರೈಲ್ವೆ ಪೊಲೀಸರು ಮೃತದೇಹವನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕಣದ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.