ಮುಂಬೈ: 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಹೊಡೆದು ಕೊಂದಿರುವ ಘಟನೆ ಜೊಲ್ಲಾಪುರದ ಕಲಾಂಬಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಲಿನ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ವಾಗ್ವಾದ ನಡೆದು ಇತರ ಕೈದಿಗಳು 59 ವರ್ಷದ ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭವರ್ಲಾಲ್ ಗುಪ್ತಾ ಮೇಲೆ ಹಲ್ಲೆಗೈದಿದ್ದಾರೆ.

ಮೊಹಮ್ಮದ್‌ ಅಲಿ ಖಾನ್‌ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಮೊಹಮ್ಮದ್‌ ಅಲಿ ಖಾನ್‌ ಹಾಗೂ ಕೆಲ ವಿಚಾರಣಾಧೀನ ಕೈದಿಗಳ ನಡುವೆ ಇದ್ದಕ್ಕಿದ್ದಂತೆ ವಾಗ್ವಾದ ನಡೆದಿದೆ.

ಈ ವೇಳೆ ಒಳಚರಂಡಿಯಲ್ಲಿಟ್ಟಿದ್ದ ಕಬ್ಬಿಣದ ರಾಡ್‌ನಿಂದ ಖಾನ್‌ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಖಾನ್‌ ಮೃತಪಟ್ಟಿದ್ದಾನೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

ದಾಳಿಕೋರರನ್ನು ಪ್ರತೀಕ್ ಅಲಿಯಾಸ್ ಪಿಲ್ಯ ಸುರೇಶ್ ಪಾಟೀಲ್, ದೀಪಕ್ ನೇತಾಜಿ ಖೋಟ್, ಸಂದೀಪ್ ಶಂಕರ್ ಚವಾಣ್, ಋತುರಾಜ್ ವಿನಾಯಕ್ ಇನಾಮದಾರ್ ಮತ್ತು ಸೌರಭ್ ವಿಕಾಸ್ ಎಂದು ಗುರುತಿಸಲಾಗಿದೆ. ಕೊಲ್ಲಾಪುರ ಪೊಲೀಸರು ಐವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.