ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆಗಸ್ಟ್​ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ.

ಆ.25ರಂದೇ ಬ್ಯಾಂಕಿಂಗ್‌ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಎಎಸ್‌ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಕೆಪಿಎಸ್​ಸಿ ಪರೀಕ್ಷೆ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಸೂಚಿಸಿದ್ದರು. ಅದರಂತೆ ಇದೀಗ ಆಗಸ್ಟ್​ 25ರ ಬದಲಾಗಿ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.