ಚೆನ್ನೈ: ಡಿಎಂಕೆ ಮೈತ್ರಿ ಕಡಿದುಕೊಂಡರೆ ಮಾತ್ರ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಮಕ್ಕಳ್ ನೀದಿ ಮೈಯಂ (ಎಂಎನ್ಎಂ) ಪಕ್ಷದ ಸ್ಥಾಪಕ ಹಾಗೂ ನಟ ಕಮಲ್ ಹಾಸನ್ ಹೇಳಿದ್ದಾರೆ.
`ಕಾಂಗ್ರೆಸ್ ಹಾಗೂ ನಮ್ಮ ಪಕ್ಷದ ಮೈತ್ರಿಯಿಂದ ತಮಿಳುನಾಡಿನ ಜನರಿಗೆ ಪ್ರಯೋಜನವಾಗಲಿದೆ. 2019ರ ಲೋಕಸಭಾ ಚುನಾವಣೆಯಲ್ಲೂ ಉತ್ತಮ ಸಾಧನೆ ಮಾಡಬಹುದು. ಆದರೆ, ಕಾಂಗ್ರೆಸ್ ಪಕ್ಷವು ಡಿಎಂಕೆ ಜೊತೆಗಿನ ಮೈತ್ರಿ ಕಡಿದುಕೊಳ್ಳಬೇಕು’ ಎಂದು ಅವರು ಷರತ್ತು ಹಾಕಿದ್ದಾರೆ.
ತಮಿಳು ಖಾಸಗಿ ಸುದ್ದಿವಾಹಿನಿಗೆ ಶನಿವಾರ ನೀಡಿದ ಸಂದರ್ಶನದಲ್ಲಿ ಕಮಲ್ ಹಾಸನ್ ಅವರು ಇದೇ ಮೊದಲ ಬಾರಿಗೆ ಡಿಎಂಕೆ ವಿರುದ್ಧ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದರು.