ಬೆಂಗಳೂರು: ಸಹಪಾಠಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಟ ‘ದುನಿಯಾ’ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಮನೀಶ್ ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೀಶ್ ಹಾಗೂ ಸಾಮ್ರಾಟ್ ಒಂದೇ ಕಾಲೇಜಿನ ವಿದ್ಯಾರ್ಥಿಗಳು. ವಿಜಯ್ ಪುತ್ರ ಸಾಮ್ರಾಟ್ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ಸೋಮವಾರ ಸಂಜೆ ತೆರಳುತ್ತಿದ್ದರು. ರಾಜರಾಜೇಶ್ವರಿ ನಗರದಲ್ಲಿ ಮನೀಶ್ ಹಾಗೂ ಆತನ ಸ್ನೇಹಿತರು ಸಾಮ್ರಾಟ್ ಚಲಾಯಿಸುತ್ತಿದ್ದ ಕಾರನ್ನು ಹಿಂದಿಕ್ಕಿ ತಮ್ಮ ಕಾರಿನಲ್ಲಿ ಮುಂದಕ್ಕೆ ಸಾಗಿದ್ದರು. ಈ ವಿಚಾರಕ್ಕೆ ಎರಡು ಗುಂಪಿನ ನಡುವೆ ಸಣ್ಣ ಜಗಳ ನಡೆದಿತ್ತು. ನಂತರ, ಇಬ್ಬರೂ ಅಲ್ಲಿಂದ ತೆರಳಿದ್ದರು ಎಂದು ಮೂಲಗಳು ಹೇಳಿವೆ.
‘ಸಾಮ್ರಾಟ್ ಹಾಗೂ ಆತನ ಸ್ನೇಹಿತರು ಮಂಗಳವಾರ ಮಧ್ಯಾಹ್ನ ಮನೀಶ್ ಗೌಡನನ್ನು ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಂಗೇರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

