ಗಿರಿದಿಹ್ : ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದವರ ಎಸ್ಯುವಿ ವಾಹನವೊಂದು ಭೀಕರವಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಮುಫಸ್ಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗ್ಮಾರಾದಲ್ಲಿ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ವಾಹನದಲ್ಲಿ 10 ಮಂದಿಯಿದ್ದರು. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್ ಮಾತನಾಡಿ, ಕಾರಿನಲ್ಲಿದ್ದವರು ಬಿರ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಥೋರಿಯಾ ಗ್ರಾಮದಿಂದ ಸುಮಾರು 40 ಕಿಮೀ ದೂರದಲ್ಲಿರುವ ಟಿಕೋಡಿಹ್ನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು ಮತ್ತು ಅಪಘಾತ ಸಂಭವಿಸಿದಾಗ ಮನೆಗೆ ಹಿಂದಿರುಗುತ್ತಿದ್ದರು.