ಬೆಂಗಳೂರು: ಹದಿನೈದು ವರ್ಷಗಳ ಹಿಂದೆ ನಡೆದಿದ್ದ ಟಿ.ವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ನವದೆಹಲಿಯ ಹೆಚ್ಚುವರಿ ಸೆಷೆನ್ಸ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
5 ನೇ ಅಪರಾಧಿ ನೇರವಾಗಿ ಭಾಗಿಯಾಗದಿದ್ದರೂ ಕೃತ್ಯಕ್ಕೆ ಕಾರು ನೀಡಿದ ಕಾರಣಕ್ಕೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಗಳಾಗಿರುವ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜಿತ್ ಮಲಿಕ್, ಮತ್ತು ಅಜಯ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ, ತಲಾ 1.25 ಲಕ್ಷ ರೂ. ದಂಡ ಹಾಗೂ 5 ನೇ ಅಪರಾಧಿ ಅಜಯ್ ಸೇಥಿಗೆ 3 ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆ ಹಾಗೂ 7.25 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ರವೀಂದ್ರ ಕುಮಾರ್ ಆದೇಶಿಸಿದ್ದಾರೆ.