ಕೋಲಾರ: ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವೇಮಗಲ್ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವೆಂಕಟೇಶ್ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದ ಬಳಿ ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಇಬ್ಬರ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ವೇಳೆ ಮತ್ತೊಬ್ಬ ಆರೋಪಿ ಸಂತೋಷ್ಗೂ ಗಾಯವಾಗಿದೆ. ಆರೋಪಿಗಳು ನಡೆಸಿದ ಹಲ್ಲೆಯಿಂದ ಇನ್ಸ್ಪೆಕ್ಟರ್ ವೆಂಕಟೇಶ್, ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಶ್ರೀನಿವಾಸ್ ಅವರು ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ದುಷ್ಕರ್ಮಿಗಳು ಪರಿಚಯಸ್ಥರಂತೆ ಮಾತಾಡಿಸಿ ಚಾಕು ಇರಿದು ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರ ಪೈಕಿ ಮೂವರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ.