ಉಡುಪಿ: ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿಯ ಹಾಡಿಯಲ್ಲಿ ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್.(30), ಶಿವಮೊಗ್ಗ ಜಿಲ್ಲೆಯ ಸದಾಶಿವಪುರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿ ಯಹೋ ಶಿವು(25) ಎಂದು ಗುರುತಿಸಲಾಗಿದೆ.
ಅ.12ರಂದು ಮಂದಾರ್ತಿಯ ಬಳಿಯ ಹಾಡಿಯಲ್ಲಿ ಕಾಡು ಹಂದಿ ಬೇಟೆಗಾಗಿ ಕಚ್ಚಾ ಬಾಂಬ್ ಇರಿಸಲಾಗಿತ್ತು. ಕಚ್ಚಾ ಬಾಂಬ್ ಕಚ್ಚಿದ ಪರಿಣಾಮ ಸುಧೀರ್ ಪೂಜಾರಿ ಎಂಬವರ ಸಾಕು ನಾಯಿ ಸಾವನ್ನಪ್ಪಿತ್ತು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅ.13ರಂದು ಆರೋಪಿಗಳನ್ನು ಬಂಧಿಸಿದ್ದಾರೆ