ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣದ ಒಂದು ಭಾಗ ಸೋಮವಾರ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಆರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ಬಿಹಾರ ಮೂಲದ ಬಬ್ಲು ಮತ್ತು ಪಶ್ಚಿಮ ಬಂಗಾಳದ ಸುನಿಲ್ ಎಂದು ಗುರುತಿಸಲಾಗಿದೆ. ಅವಶೇಷಗಳಡಿಯಲ್ಲಿ ಮತ್ತೊಬ್ಬ ಕಾರ್ಮಿಕ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್ನಿಂದ 40 ಕಿಮೀ ದೂರದಲ್ಲಿರುವ ಕನಕಮಾಮಿಡಿಯಲ್ಲಿರುವ ಕ್ರೀಡಾ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ಇತರೆ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರು ಟೇಬಲ್ ಟೆನ್ನಿಸ್ ಆಡಿಟೋರಿಯಂ ನಿರ್ಮಾಣದಲ್ಲಿ ನಿರತರಾಗಿದ್ದ ವೇಳೆ ಮೇಲ್ಛಾವಣಿ ಸ್ಲ್ಯಾಬ್ ಕುಸಿದಿದೆ. ಒಟ್ಟು 14 ಕಾರ್ಮಿಕರು ಸ್ಥಳದಲ್ಲಿದ್ದು, ಅವರಲ್ಲಿ ಮೂವರು ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಕರ್ತರು ಅವಶೇಷಗಳಿಂದ ಇಬ್ಬರ ಮೃತದೇಹವನ್ನು ಹೊರತೆಗೆದಿದ್ದಾರೆ.