ಇತ್ತೀಚೆಗಿನ ದಿನಗಳಲ್ಲಿ ಹೃದಯಘಾತದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ನಾವು ಹೃದಯದತ್ತ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಎದೆ ಕಾಣಿಸಿಕೊಂಡಾಗ ಹೆಚ್ಚಿನವರು ಗ್ಯಾಸ್ಟಿಕ್ ಅಂಥ ನಮಗೆ ತೋಚಿದ ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ. ಅದರ ಬದಲಿಗೆ ಆಸ್ಪತ್ರೆಗೆ ತೆರಳಿ ಇಸಿಜಿ ಮಾಡಿಸಿ ನೋಡಿಕೊಳ್ಳುವುದು ಹೃದಯದ ಆರೋಗ್ಯ ಕಾಪಾಡುವ ಮೊದಲ ಮೆಟ್ಟಿಲಾಗಿದೆ.
ಬದಲಾದ ಜೀವನ ಶೈಲಿ, ಒತ್ತಡ, ವ್ಯಾಯಾಮ ಕೊರತೆ, ವಾಯು ಮಾಲಿನ್ಯ ಇತರೆ ಕಾರಣಗಳಿಂದ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಪ್ರಮಾಣ ಹೆಚ್ಚಾಗುತ್ತಿದ್ದು, ಇವೆರಡು ಒಂದು ನಾಣ್ಯದ ಎರಡು ಮುಖ ಎಂಬಾಂತಾಗಿದೆ.
ಮಧುಮೇಹದಿಂದ ಬಳಲುತ್ತಿರುವವರಲ್ಲಿ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಶೇ.5ರಷ್ಟು ಹೆಚ್ಚು ಇರುತ್ತದೆ. ಶೇ.25ರಷ್ಟು ಸಾವುಗಳು ಹೃದಯ ಸಂಬಂಧಿ ಸಮಸ್ಯೆಗಳಿಂದ ಉಂಟಾಗುತ್ತಿದೆ. ಅಷ್ಟೇ ಅಲ್ಲದೆ ಸುಮಾರು 30- 40ರ ವಯೋಮಾನದವರಲ್ಲಿ ಕಂಡು ಬರುತ್ತಿರುವುದು ಆತಂಕಕಾರಿಯಾಗಿದೆ.
ಹೃದಯದ ಆರೋಗ್ಯ ಕಾಪಾಡಬೇಕಾದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ, ಕೊಬ್ಬಿನಾಂಶ, ಶರೀರದ ತೂಕ ಮತ್ತು ಸೊಂಟದ ಸುತ್ತಳತೆ, ಅತಿಯಾಸೆ ಈ ಐದು ಅಂಶಗಳನ್ನು ಕಡಿಮೆಯಿಟ್ಟುಕೊಂಡರೆ ಒಳಿತು. ಜತೆಗೆ ವ್ಯಾಯಾಮ, ದೇಹದಂಡನೆ ಮುಖ್ಯ. ಗ್ರಾಮೀಣ ಪ್ರದೇಶದಲ್ಲಿ ಹೃದಯಾಘಾತ ಪ್ರಮಾಣ ಶೇ.6ರಷ್ಟು ನಗರ ಪ್ರದೇಶದಲ್ಲಿ ಶೇ.8ರಿಂದ ಶೇ.10ರಷ್ಟು ಹೆಚ್ಚಳವಾಗುತ್ತಿದೆ. ಮಹಿಳೆಯರಲ್ಲಿ 50 ವರ್ಷದೊಳಗೆ ಹೃದಯಾಘಾತ ಇತ್ತು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಸಂಸಾರದ ಒತ್ತಡ, ವೃತ್ತಿಯ ಒತ್ತಡ, ಮಕ್ಕಳನ್ನು ನೋಡಿಕೊಳ್ಳುವ ಒತ್ತಡ, ಹಾರ್ಮೋನ್ ಅಸಮತೋಲನದಿಂದ ಒತ್ತಡ ಹೆಚ್ಚುತ್ತಿದೆ. 40ವರ್ಷ ಮೀರಿದ ಬಳಿಕ ಗಂಡಸರು 45ವರ್ಷ ಮೀರಿದ ಬಳಿಕ ಮಹಿಳೆಯರು ನಿಯಮಿತವಾಗಿ ರಕ್ತದಲ್ಲಿ ಸಕ್ಕರೆ ಪ್ರಮಾಣ, ಕೊಬ್ಬಿನಾಂಶ ಪರೀಕ್ಷೆ, ಥ್ರೆಡ್ಮಿಲ್ ಇಸಿಜಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ, ಪ್ರತಿ ಬಾರಿ ಸಾಮಾನ್ಯ ಸ್ಥಿತಿಯಲ್ಲಿದ್ದರೆ 2ವರ್ಷಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬಹುದು.
ಹೃದಯಘಾತವಾದಾಗ ಸಾಮಾನ್ಯವಾಗಿ ಎದೆಯ ಎಡಭಾಗ, ಮಧ್ಯಭಾಗದಲ್ಲಿ ನೋವು, ಉರಿ ಕಾಣಿಸಿಕೊಳುತ್ತದೆ. ಶೇ.30ರಿಂದ 40ರಷ್ಟು ಮಂದಿಗೆ ಹೃದಯಘಾತವಾದಾಗ ಎದೆಭಾಗದಲ್ಲಿ ನೋವು ಕಾಣಿಸಿಕೊಳುವುದಿಲ್ಲ. ಬದಲಿಗೆ ಗಂಟಲು, ದವಡೆ ನೋವು ಕಾಣಿಸಿಕೊಳ್ಳಬಹುದು, ಬೆನ್ನಿನ ಮೇಲ್ಭಾಗ, ಹೊಟ್ಟೆಯ ಮೇಲ್ಭಾಗದಲ್ಲಿ ನೋವು ಕಾಣಿಸಿಕೊಂಡು ವಾಂತಿಯಾಗಬಹುದು, ಅತಿಯಾಗಿ ಬೆವರು ಬರಬಹುದು. ಈ ರೀತಿಯಾದಾಗ ಸಮೀಪದ ಆಸ್ಪತ್ರೆಗೆ ತೆರಳುವುದು ಅತಿ ಮುಖ್ಯ.