ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಧಿದೇವತೆ ಚಾಮುಂಡೇಶ್ವರಿ ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುವ ಮೂಲಕ ವಿವಿಧ ಕಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಹಾಗೂ ಹಲವು ಗಣ್ಯರಿಗೆ ದರ್ಶನ ನೀಡಿದ್ದಾಳೆ.
ಶುಕ್ರವಾರ ಮುಂಜಾನೆಯಿಂದಲೇ ರಾಜ್ಯದ ಮೂಲೆ ಮೂಲೆಯಿಂದ ಬೆಟ್ಟಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಜಯಘೋಷ ಕೂಗುತ್ತ ಚಾಮುಂಡೇಶ್ವರಿ ದರ್ಶನ ಪಡೆದರು. ಸಾವಿರಾರು ಮಂದಿ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬಂದು ಭಕ್ತಿಭಾವ ಮೆರೆದರು. 5,100 ಹಾಗೂ 300 ರೂ ವಿಶೇಷ ದರ್ಶನದ ಸರತಿ ಸಾಲಿನಲ್ಲೂ ಹೆಚ್ಚು ಜನ ಕಂಡುಬಂದರು. ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮುಂಜಾನೆ 3 ಗಂಟೆಯಿಂದಲೇ ಬೆಟ್ಟದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು.
ಪ್ರತಿ ವಾರದಂತೆ ಮೊದಲಿಗೆ ದೇವಿಗೆ ಅಭಿಷೇಕ, ರುದ್ರಾಭೀಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ಬೆಳಗ್ಗೆ 11 ಗಂಟೆಗೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಆಷಾಢ ಮಾಸದ ಪ್ರತಿ ಶುಕ್ರವಾರಗಳಲ್ಲೂ ಚಾಮುಂಡೇಶ್ವರಿಗೆ ವಿವಿಧ ರೀತಿಯ ಅಲಂಕಾರಗಳನ್ನು ಮಾಡಲಿದ್ದು, ಈ ವಾರ ದೇವಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ಗುಲಾಬಿ ಬಣ್ಣದ ಸೀರೆಯನ್ನುಟ್ಟು, ಸಿಂಹವಾಹಿನಿಯಾಗಿ, ವಿವಿಧ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಂಡು ಭಕ್ತರು ಪುನೀತರಾದರು. ಅಮ್ಮನ ಉತ್ಸವ ಮೂರ್ತಿಗೆ ನೀಲಿ ಬಣ್ಣದ ಸೀರೆಯನ್ನುಡಿಸಲಾಗಿತ್ತು. ದೇವಸ್ಥಾನವನ್ನು ವಿವಿಧ ಬಗೆಯ ಹೂಗಳಿಂದ ಸಿಂಗರಿಸಲಾಗಿತ್ತು.
2ನೇ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಅಸಂಖ್ಯಾತ ಭಕ್ತರೊಂದಿಗೆ ಹಲವು ಗಣ್ಯರು ದೇವಿಯ ದರ್ಶನ ಪಡೆದರು. ಪ್ರಮುಖವಾಗಿ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕ ಎಂಟಿಬಿ ನಾಗರಾಜ್, ಎಂಎಲ್ಸಿ ಸೂರಜ್ ರೇವಣ್ಣ, ನಟರಾದ ಡಾಲಿ ಧನಂಜಯ್, ಧನ್ವೀರ್ ಸೇರಿದಂತೆ ಹಲವು ಗಣ್ಯರು ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು.
ಆಷಾಢ ಶುಕ್ರವಾರದ ಅಂಗವಾಗಿ ಬೆಟ್ಟಕ್ಕೆ ಭೇಟಿ ನೀಡಿದ ಭಕ್ತರಿಗೆ ಕಳೆದ ವಾರದಂತೆ ಅಚ್ಚುಕಟ್ಟಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಕಳೆದ 12 ವರ್ಷದಿಂದ ಪ್ರತಿ ವರ್ಷ ೨ನೇ ಆಷಾಢ ಶುಕ್ರವಾರದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿಸುವ ನಂಜನಗೂಡಿನ ಚಾಮುಂಡಿ ಟೌನ್ಶಿಪ್ ಹಾಗೂ ಕೊಯಮತ್ತೂರಿನ ದುರ್ಗಾ ಏಜೆನ್ಸಿಯ ಶಾಂತಿ ಮತ್ತು ತಂಬು ದಂಪತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 6.30ರಿಂದ ಆರಂಭವಾದ ಪ್ರಸಾದ ವಿತರಣೆ ರಾತ್ರಿ 7.30ರವರೆಗೂ ನಡೆಯಿತು.