ಮೈಸೂರು : ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆದಿದ್ದು, ಇದೇ ವೇಳೆ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತೋಳಿಗೆ, ಎದೆಯ ಭಾಗಕ್ಕೆ ಹಾಗೂ ಹೊಟ್ಟೆಯ ಮೇಲೆ ಶಂಖ ಹಾಗೂ ಚಕ್ರದ ಮುದ್ರೆ ಹಾಕಿಸಿಕೊಂಡರು.
ಉಡುಪಿ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿ ಮಾತನಾಡಿ ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಾಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಎನ್ನುವ ನಂಬಿಕೆ ಇದೆ. ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ. ಚಾತುರ್ಮಾಸ್ಯ ಕೂರುವ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲವಾದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಶ್ರೀ ಕೃಷ್ಣಾ ಮಿತ್ರಮಂಡಳಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ತಂತ್ರಿ ಮಾತನಾಡಿ, ಪ್ರತಿವರ್ಷವೂ ನಾನಾಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಿದರು.
ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ರಮೇಶ್, ಮಾಜಿ ಅಧ್ಯಕ್ಷರಾದ ಸುಬ್ರಹ್ಮಣ್ಯ ತಂತ್ರಿ ಹಾಗೂ ರವಿ ಶಾಸ್ತ್ರಿ, ಎಂ ಕೆ ಪುರಾಣಿಕ್, ಶ್ರೀ ವತ್ಸ, ಸುರೇಶ್ ಹಾಗೂ ಇನ್ನಿತರರು ಹಾಜರಿದ್ದರು.