ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿ ವರ್ಷ ಜೂನ್ 14 ರಂದು ವಿಶ್ವದಾದ್ಯಂತ ‘ವಿಶ್ವ ರಕ್ತದಾನಿಗಳ ದಿನ’ವನ್ನು ಆಚರಣೆ ಮಾಡಲಾಗುತ್ತದೆ. ಭೂಮಿ ಮೇಲಿರುವ ಪ್ರತಿಯೊಬ್ಬ ಮನುಷ್ಯನ ದೇಹದಲ್ಲಿ ಇರುವುದು ಒಂದೇ ರಕ್ತ. ಮನುಷ್ಯ ಆರೋಗ್ಯ ಇರಲು ಶುದ್ದ ರಕ್ತದ ಅವಶ್ಯಕತೆ ತುಂಬಾ ಇರುತ್ತದೆ. ಜಗತ್ತಿನೆಲ್ಲಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಜನರಿಗೆ ರಕ್ತದ ಅವಶ್ಯವಿರುತ್ತದೆ. ಅನೇಕರು ಸರಿಯಾದ ಸಮಯಕ್ಕೆ ರಕ್ತ ಸಿಗದೆ ಸಾವನ್ನಪ್ಪುವುದು ಉಂಟು. ಅದಕ್ಕಾಗಿಯೇ ರಕ್ತವನ್ನು ಜೀವದ್ರವ್ಯ ಎನ್ನಲಾಗುತ್ತದೆ.
ವಿಶ್ವ ಆರೋಗ್ಯ ಸಂಸ್ಥೆಯು ರಕ್ತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರತಿ ವರ್ಷ ಹೊಸ ಹೊಸ ಥೀಮ್ನೊಂದಿಗೆ ವಿಶ್ವ ರಕ್ತದಾನಿಗಳ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ವರ್ಷ ‘ರಕ್ತವನ್ನು ನೀಡಿ, ಪ್ಲಾಸ್ಮಾವನ್ನು ನಿಡಿ, ಜೀವವನ್ನು ಹಂಚಿಕೊಳ್ಳಿ’ ಎಂಬ ಸಂದೇಶದೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ.
ಭಾರತದಲ್ಲಿ ಪ್ರತಿ ವರ್ಷ 5 ಕೋಟಿ ಯೂನಿಟ್ ರಕ್ತ ಬೇಕಾಗುತ್ತದೆ. ಆದರೆ, ಕೇವಲ 2.5 ಕೋಟಿ ಯೂನಿಟ್ ಮಾತ್ರ ರಕ್ತ ಸಕಾಲಕ್ಕೆ ಲಭ್ಯವಾಗುತ್ತದೆ. ರಕ್ತದಾನವೆಂದರೆ ಅದು ಜೀವದಾನ. ಇದಕ್ಕೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ. ದೇಶದಲ್ಲಿ ಪ್ರತಿ 2 ಸೆಕೆಂಡ್ಗೆ ಯಾರಿಗಾದರೂ ರಕ್ತದ ಅಗತ್ಯ ಬಿದ್ದೇ ಬೀಳುತ್ತದೆ.
ದಾನಿಗಳು ಒಮ್ಮೆ ರಕ್ತ ದಾನ ಮಾಡಿದರೆ ಮುಂದಿನ ಮೂರು ತಿಂಗಳವರೆಗೆ ದಾನ ಮಾಡಬಾರದು. ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುತ್ತದೆ. ಅಲ್ಲದೆ ಉತ್ತಮ ಆರೋಗ್ಯ ಹೊಂದಬಹುದು. ಇದರಿಂದ ದಾನಿಯ ಕಾರ್ಯತತ್ಪರತೆ ಹಾಗೂ ಜ್ಞಾಪಕಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆ ಮಾಡುವ ಮೂಲಕ ಹೃದಯಾಘಾತ ಆಗುವುದನ್ನು ಶೇ.80ರಷ್ಟು ಕಡಿಮೆ ಮಾಡುತ್ತದೆ. ರಕ್ತದ ಒತ್ತಡ, ಮಧುಮೇಹದಂತಹ ರೋಗಗಳನ್ನು ತಡೆಯಲು ಕೂಡ ರಕ್ತದಾನ ಸಹಕಾರಿಯಾಗಲಿದೆ.