News Karnataka Kannada
Monday, April 29 2024
ನುಡಿಚಿತ್ರ

ಹತ್ತೂರನ್ನು ಸೆಳೆಯುವ ಸುತ್ತೂರು ಜಾತ್ರೆ ಬನ್ನಿ…

Photo Credit :

ಹತ್ತೂರನ್ನು ಸೆಳೆಯುವ ಸುತ್ತೂರು ಜಾತ್ರೆ ಬನ್ನಿ...

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿಗೆ ಸೇರಿದ ಸುತ್ತೂರಿನಲ್ಲೀಗ ಸಂಭ್ರಮ, ಸಡಗರ, ಮನೆ ಮಾಡಿದೆ. ಎಲ್ಲಿ ನೋಡಿದರೂ ಜನವೋ ಜನ.. ಎಲ್ಲರ ಮುಖದಲ್ಲಿಯೂ ಸಂತಸದ ಕಳೆ.. ಇಡೀ ಊರಿಗೆ ಊರೇ ತಳಿರು ತೋರಣ, ವಿದ್ಯುದ್ದೀಪಗಳಿಂಗ ಅಲಂಕಾರಗೊಂಡು ಕಂಗೊಳಿಸುತ್ತಿದೆ. ಭಕ್ತಿಭಾವದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಪ್ರದರ್ಶನ, ಕೃಷಿ ಮೇಳ, ಕ್ರೀಡೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಜಾತ್ರೆಗೆ ಕಳೆಕಟ್ಟಿವೆ.

ಹಾಗೆ ನೋಡಿದರೆ ಇತರೆಡೆಯಲ್ಲಿ ನಡೆಯುವ ಜಾತ್ರೆಗಿಂತ, ವಿಶಿಷ್ಠವಾಗಿ ಮತ್ತು ವಿಭಿನ್ನವಾಗಿ ಸುತ್ತೂರು ಜಾತ್ರೆ ನಡೆಯುತ್ತಿದೆ. ಇಲ್ಲಿ ಪರಂಪರೆ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಂಸ್ಕೃತಿ ಮಿಳಿತಗೊಂಡಿರುವ ಕಾರಣದಿಂದ ಬರೀ ಜಾತ್ರೆಯಾಗದೆ ಮಹೋತ್ಸವವಾಗಿ ಗಮನಸೆಳೆಯುತ್ತದೆ. ಕಪಿಲ ನದಿ ದಡದಲ್ಲಿ ನೆಲೆನಿಂತಿರುವ ಸುತ್ತೂರು ಕ್ಷೇತ್ರದಲ್ಲಿ ನಡೆಯುವ ಜಾತ್ರೆ ಒಂದು ದಿನದಲ್ಲಿ ಮುಗಿದು ಹೋಗುವ ಜಾತ್ರೆಯಲ್ಲ. ಸುಮಾರು ಆರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಆರೋಗ್ಯ ಮೇಳ, ಕೃಷಿ ಮೇಳ, ಉತ್ಪಾದಕ ಮತ್ತು ಗ್ರಾಹಕ ಮೇಳ, ಕ್ರೀಡಾ ಮೇಳ, ಸಾಂಸ್ಕೃತಿಕ ಮೇಳ, ಶೈಕ್ಷಣಿಕ ಮೇಳ, ಸಾಹಿತ್ಯ ಮತ್ತು ಪುಸ್ತಕ ಮೇಳ, ಸರ್ವಧರ್ಮ ಸಮ್ಮಿಲನ, ಸಾಮೂಹಿಕ ವಿವಾಹ, ವಿವಿಧ ವಸ್ತು ಪ್ರದರ್ಶನಗಳು, ದನಗಳ ಜಾತ್ರೆ, ಜಾನಪದ ಜಾತ್ರೆ, ಕುಸ್ತಿ ಪಂದ್ಯಾವಳಿ, ನಗೆ ಉತ್ಸವ, ನಾಟಕ, ನೃತ್ಯ, ವಚನಗಾಯನ, ಸುಗಮ ಸಂಗೀತ, ಯಕ್ಷಗಾನ ಹೀಗೆ ನೂರಾರು ಕಾರ್ಯಕ್ರಮಗಳು ನಡೆಯಲಿವೆ.

ಆರು ದಿನಗಳ ಜಾತ್ರೆ: ಸುತ್ತೂರು ಜಾತ್ರೆಯು ಸುಮಾರು ಆರು ದಿನಗಳ ಕಾಲ(ಪ್ರಸಕ್ತ ವರ್ಷ ಫೆಬ್ರವರಿ 24ರಿಂದ 29ರವರೆಗೆ) ನಡೆಯಲಿದ್ದು, ಒಂದೊಂದು ದಿನವೂ ಒಂದೊಂದು ರೀತಿಯ ವಿಶೇಷತೆಯಿರುತ್ತದೆ. ಸುತ್ತೂರಿನ ಶ್ರೀಮಠದಿಂದ ಆದಿಜಗದ್ಗುರು ಶಿವಯೋಗಿಗಳ ಉತ್ಸವಮೂರ್ತಿಯನ್ನು ಕತೃ ಗದ್ದುಗೆಗೆ ತರುವುದರೊಂದಿಗೆ ಜಾತ್ರೆ ಆರಂಭಗೊಳ್ಳುತ್ತದೆ.
ಜಾತ್ರೆಯ ಎರಡನೇ ದಿನ ಸಹಸ್ರಕುಂಭೋತ್ಸವ ನಡೆದರೆ,  ಮೂರನೇ ದಿನದಂದು ಬೆಳಿಗ್ಗೆ ರಥೋತ್ಸವ ನಡೆಯುತ್ತದೆ.  ನಾಲ್ಕನೇ ದಿನದಂದು ಸಂಜೆ ನಡೆಯುವ ಶ್ರೀ ಮಹದೇಶ್ವರ ಕೊಂಡೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಗಮನ ಸೆಳೆಯುತ್ತದೆ.

ಐದನೇ ದಿನ ರಾತ್ರಿ ಲಕ್ಷದೀಪೋತ್ಸವ ಹಾಗೂ ತೆಪ್ಪೋತ್ಸವ, ಆರನೇ ದಿನ ಅನ್ನ ಬ್ರಹ್ಮೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವಗಳು ನಡೆಯುತ್ತವೆ. ಜಾತ್ರೆಯ ಸಂದರ್ಭ ನಡೆಯುವ ಕಲಾತಂಡಗಳ ಮೆರವಣಿಗೆ ಛತ್ರಿ, ಚಾಮರ, ಸೂರಾಪಾನಿ, ಗಾರುಡಿಗೊಂಬೆ, ಮರಗಾಲು ಕುಣಿತ, ನೃತ್ಯ, ವೀರಗಾಸೆ, ಡೊಳ್ಳು ಹಾಗೂ ಪೂಜಾ ಕುಣಿತ, ಕರಡಿ ಮೇಳ, ನಾದಸ್ವರ ಸೇರಿ ವಿವಿಧ ಜನಪದ ಕಲಾತಂಡಗಳೊಂದಿಗೆ ಸಾಗುತ್ತಿದ್ದರೆ ಅದನ್ನು ನೋಡುವುದೇ ಕಣ್ಣಿಗೊಂದು ಹಬ್ಬವಾಗುತ್ತದೆ.

ಇನ್ನು ಜಾತ್ರೆಯ ಸಂದರ್ಭ ಶ್ರೀ ಕ್ಷೇತ್ರದಲ್ಲಿರುವ ಕತೃ ಗದ್ದುಗೆ ಮತ್ತು ಪುರಾಣ ಪ್ರಸಿದ್ಧ ದೇವಾಲಯಗಳಾದ ಶ್ರೀ ಸೋಮೇಶ್ವರ, ಶ್ರೀ ಮಹದೇಶ್ವರ, ಶ್ರೀ ಶಂಕರನಾರಾಯಣ, ಶ್ರೀ ವೀರಭದ್ರೇಶ್ವರ, ಶ್ರೀ ನಾರಾಯಣಸ್ವಾಮಿ ದೇವಾಲಯಗಳಲ್ಲಿ ತ್ರಿಕಾಲ ಪೂಜೆ, ಮಹಾರುದ್ರಾಭಿಷೇಕ, ನವನೀತಾಲಂಕಾರ, ಹಸಿರುವಾಣಿ ಅಲಂಕಾರ ಹಾಗೂ ಗುರುಪರಂಪರೆಯ ಸಂಸ್ಮರಣೋತ್ಸವಗಳು ಕೂಡ ನಡೆಯುತ್ತವೆ.

ಶಾಂತಿ, ಸಂಯಮದ ಪುಣ್ಯಕ್ಷೇತ್ರ: ಇನ್ನು ಸುತ್ತೂರಿನ ಇತಿಹಾಸದ ಬಗ್ಗೆ ನೋಡುವುದಾದರೆ ಇಲ್ಲಿನ ಶ್ರೀ ಮಠಕ್ಕೆ ಸುಮಾರು ಹತ್ತು ಶತಮಾನಗಳ ಗತಇತಿಹಾಸವಿರುವುದನ್ನು ನಾವು ಕಾಣಬಹುದು. ಈ ಕ್ಷೇತ್ರ ಶಾಂತಿ, ಸಂಯಮ, ಸಹಬಾಳ್ವೆಯನ್ನು ನಾಡಿಗೆ ಸಾರಿದ ಕ್ಷೇತ್ರವೂ ಹೌದು.  ಇದಕ್ಕೆ ಪೂರಕವಾದ ಕಥೆಯೊಂದು ಪ್ರಚಲಿತದಲ್ಲಿರುವುದನ್ನು ನಾವು ಕಾಣಬಹುದು. ಅದು ಸುಮಾರು ಒಂದು ಸಾವಿರ ವರ್ಷಗಳ ಹಿಂದಿನ ಕಾಲಾವಧಿ. ರಾಜರ ಆಡಳಿತವಿದ್ದ ದಿನಗಳು. ಎಲ್ಲೆಡೆಯೂ ರಾಜ್ಯ ವಿಸ್ತರಣೆಗಾಗಿ ರಾಜರುಗಳ ನಡುವೆ ಹೋರಾಟ ನಡೆಯುತ್ತಿತ್ತು. ಆಗಾಗ್ಗೆ ರಾಜರುಗಳು ದಂಡೆಯಾತ್ರೆ ಕೈಗೊಳ್ಳುತ್ತಿದ್ದರು. ಒಬ್ಬ ರಾಜನ ಮೇಲೆ ಮತ್ತೊಬ್ಬ ರಾಜ ಯುದ್ಧ ಸಾರುತ್ತಾ ಯುದ್ದ ಮಾಡುವುದರಲ್ಲಿಯೇ ದಿನಕಳೆಯುತ್ತಿದ್ದರು. ಅದರಂತೆ ಆಗಿನ ಕಂಚಿಯ ರಾಜೇಂದ್ರ ಚೋಳನೂ ಹಾಗೂ ತಲಕಾಡಿನ ಗಂಗರಾಜ ರಾಚಮಲ್ಲ ಇಬ್ಬರು ವೈರಿಗಳಾಗಿದ್ದರು. ಇವರಿಬ್ಬರ ನಡುವೆ ಆಗಾಗ್ಗೆ ಯುದ್ಧಗಳು ನಡೆಯುತ್ತಿದ್ದವು. 

ಒಮ್ಮೆ ಇವರಿಬ್ಬರು ಭಾರೀ ಸೈನ್ಯದೊಂದಿಗೆ ಯುದ್ಧಕ್ಕೆ ಸಜ್ಜಾಗುತ್ತಾರೆ. ಆಗ ರಾಜೇಂದ್ರ ಚೋಳ ಏರಿ ಹೊರಟಿದ್ದ ಕುದುರೆ ಗೊತ್ತುಗುರಿಯಿಲ್ಲದೆ ಓಡತೊಡಗಿತ್ತು. ಏನೇ  ಮಾಡಿದರೂ ಕುದುರೆಯನ್ನು ತಡೆದು ನಿಲ್ಲಿಸುವುದಕ್ಕೆ ರಾಜನಿಗೆ ಸಾಧ್ಯವಾಗಲಿಲ್ಲ. ಹಾಗೆ ಓಡಿದ ಕುದುರೆ ಕಪಿಲಾ ನದಿ ತೀರದಲ್ಲಿ ಕುಳಿತು ತಪಸ್ಸು ಮಾಡುತ್ತಿದ್ದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳಿಗೆ ಪ್ರದಕ್ಷಿಣೆ ಹಾಕಿ ನಿಂತಿತು. ಇದರಿಂದ ಅಚ್ಚರಿಗೊಂಡ ರಾಜಾ  ರಾಜೇಂದ್ರ ಚೋಳ ಕುದುರೆಯಿಂದಿಳಿದು  ಧ್ಯಾನದಲ್ಲಿ ನಿರತರಾಗಿದ್ದ  ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಪಾದಕ್ಕೆರಗುತ್ತಾನೆ. ಅದೇ ವೇಳೆಗೆ ರಾಜೇಂದ್ರ ಚೋಳನ ಕುದುರೆಯನ್ನು ಹಿಂಬಾಲಿಸಿಕೊಂಡು ರಾಚಮಲ್ಲನೂ ಅಲ್ಲಿಗೆ ಬರುತ್ತಾನೆ.  ತನ್ನ ಮುಂದೆ ಬಂದು ನಿಂತ ರಾಜರಿಬ್ಬರನ್ನು ಕಂಡ ಶ್ರೀ ಶಿವರಾತ್ರೀಶ್ವರ ಮಹಾಸ್ವಾಮಿಗಳು ಅವರಿಬ್ಬರಿಗೆ ವೈರತ್ವವನ್ನು ಬಿಟ್ಟು ಸಹಬಾಳ್ವೆ ನಡೆಸುವಂತೆಯೂ ಅಲ್ಲದೆ ಯುದ್ಧದಿಂದ ಆಗುವ ಸಾವು ನೋವುಗಳ ಬಗ್ಗೆ ಬೋಧಿಸುತ್ತಾರೆ. ಅವರ ಬೋಧನೆಯಿಂದ ಇಬ್ಬರಿಗೂ ಜ್ಞಾನೋದಯವಾಗುತ್ತದೆ. ಮುಂದೆ ಅವರು ಯುದ್ಧವನ್ನು ಬಿಟ್ಟು ಆ ಪುಣ್ಯಕ್ಷೇತ್ರದಲ್ಲಿಯೇ ನೆಲೆಸುತ್ತಾರೆ. ಅಂತಹವೊಂದು ಪುಣ್ಯಕ್ಷೇತ್ರವೇ  ಸುತ್ತೂರು ಶ್ರೀ ಕ್ಷೇತ್ರವಾಗಿದೆ.

24ನೇ ಪೀಠಾಧಿಕಾರಿಗಳಾಗಿರುವ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಈಗ ಜಾತ್ರೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು