ಚಾಮರಾಜನಗರ: ಗೌರಿಹಬ್ಬವನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣ ಹಬ್ಬ ಕಳೆಗುಂದಿತ್ತಾದರೂ ಈ ಬಾರಿ ಮತ್ತೆ ಮೊದಲಿನಂತೆ ಹಬ್ಬಾಚರಣೆ ನಡೆಯುತ್ತಿದೆ.
ಸಾಮಾನ್ಯವಾಗಿ ಹೆಣ್ಮಕ್ಕಳಿಗೆ ಗೌರಿ ಹಬ್ಬವೆಂದರೆ ಎಲ್ಲಿಲ್ಲದ ಸಡಗರ- ಸಂಭ್ರಮ. ಇದ್ದೇ ಇರುತ್ತದೆ. ಆದರೆ ಚಾಮರಾಜನಗರ ಜಿಲ್ಲೆಯ ಕುದೇರಿನಲ್ಲಿ ಇಡೀ ಊರೇ ಒಂದೆಡೆ ಸೇರಿ ಗೌರಿಹಬ್ಬವನ್ನು ಆಚರಿಸಲಾಗುತ್ತದೆ. ಕುದೇರಿನ ಗೌರಮ್ಮ ಹೆಣ್ಮಕ್ಕಳ ಇಷ್ಟಾರ್ಥವನ್ನು ನೆರವೇರಿಸುವ ತಾಯಿಯಾಗಿದ್ದು, ಅದರಲ್ಲೂ ಕಂಕಣ ಮತ್ತು ಸಂತಾನ ಭಾಗ್ಯವನ್ನು ನೆರವೇರಿಸುತ್ತಾ ಬರುತ್ತಿದ್ದಾಳೆ.
ಗೌರಿಗಣೇಶ ಹಬ್ಬದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಸಾಮೂಹಿಕವಾಗಿ ಪೂಜಾ ಕಾರ್ಯಕ್ರಮಗಳನ್ನು ನಡೆಸುವುದು ಹಿಂದಿನಿಂದಲೂ ನಡೆದು ಬಂದಿದೆ. ಆದರೆ ಗೌರಿಯನ್ನು ಸಾಮೂಹಿಕವಾಗಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವುದು ಅಪರೂಪ. ಆದರೆ ಕುದೇರುನಲ್ಲಿ ಮಾತ್ರ ಕಡಲೆಹಿಟ್ಟಿನಿಂದ ಗೌರಿಯನ್ನು ತಯಾರಿಸಿ ಮೆರವಣಿಗೆಯಲ್ಲಿ ಕೊಂಡೊಯ್ದು ಪ್ರತಿಷ್ಠಾಪಿಸಿ ಗ್ರಾಮಸ್ಥರೆಲ್ಲರೂ ಸಾಮೂಹಿಕವಾಗಿ ಪೂಜಾ ಕೈಂಕರ್ಯ ನೆರವೇರಿಸುತ್ತಾರೆ.
ಗೌರಿ ದೇಗುಲವೇ ಗ್ರಾಮದಲ್ಲಿ ಇರುವುದರಿಂದ ಗೌರಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸದೆ, ಎಲ್ಲರೂ ಒಂದೆಡೆ ಸೇರಿ ಹಬ್ಬವನ್ನು ಆಚರಿಸುತ್ತಾರೆ. ಇದು ಊರಿನಲ್ಲಿ ಸಾಮರಸ್ಯವನ್ನು ಬೆಸೆಯಲು ಕಾರಣವಾಗಿದೆ. ಇನ್ನು ಹಬ್ಬದ ಆಚರಣೆ ಹೇಗಿರುತ್ತದೆ ಎಂದರೆ ಗ್ರಾಮದ ದೊಡ್ಡಕೆರೆ ಯಮುನಾ ತಡಿಯಲ್ಲಿ ಹಬ್ಬಕ್ಕೂ ಮೊದಲು ಮರಳಿನ ಗೌರಿಯನ್ನು ಸಿದ್ದಗೊಳಿಸಿ ನಂತರ ಹಬ್ಬದ ದಿನ ವಿಶೇಷ ಪೂಜೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಗೌರಿಯನ್ನ ಪ್ರತಿಷ್ಠಾಪಿಸಲಾಗುತ್ತದೆ. ದೇವಾಲಯದಲ್ಲಿ ಐದನೇ ದಿನಕ್ಕೆ ಮರಳಿನ ಗೌರಿಯನ್ನ ಬದಲಿಸಿ ಕಡಲೆ ಹಿಟ್ಟಿನ ಗೌರಿಯನ್ನು ಪ್ರತಿಷ್ಠಾಪಿಸಿ ಅದಕ್ಕೆ ಚಿನ್ನದ ಕವಚ ಆಭರಣ ಹಾಕಲಾಗುತ್ತದೆ. ದೇವಾಲಯದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿದಾಗಿನಿಂದ ಹನ್ನೆರಡು ದಿನಗಳ ಕಾಲ ಪ್ರತಿನಿತ್ಯ ಪೂಜೆ ನಡೆಯುತ್ತದೆ.
ಆರಂಭ ದಿನದಲ್ಲಿ ನವದಂಪತಿಗಳು ಬಾಗಿನ ಅರ್ಪಿಸುತ್ತಾರೆ. ಆ ನಂತರ ಮಕ್ಕಳಿಲ್ಲದವರು ಸಂತಾನ ಭಾಗ್ಯಕ್ಕಾಗಿ ಚಿನ್ನ, ಬೆಳ್ಳಿಯ ತೊಟ್ಟಿಲು ಸಮರ್ಪಣೆ ಮಡುತ್ತಾರೆ. ಯುವತಿಯರು ಕಂಕಣ ಭಾಗ್ಯಕ್ಕಾಗಿ ಮಾಂಗಲ್ಯವನ್ನು ದೇವರಿಗೆ ಅರ್ಪಣೆ ಮಾಡುತ್ತಾರೆ. ಅಷ್ಟೇ ಅಲ್ಲ ದೀಪೋತ್ಸವ, ದೀಪಾರಾಧನೆ ಸೇರಿದಂತೆ ಇಷ್ಟಾರ್ಥ ಸಿದ್ದಿಗಾಗಿ ನಾನಾ ಹರಕೆಗಳನ್ನು ಹರಿಸಿಕೊಂಡ ಭಕ್ತರು ಸಲ್ಲಿಸಿ ಗೌರಿಯನ್ನು ಒಳಿತು ಮಾಡಲೆಂದು ಪ್ರಾರ್ಥನೆ ಸಲ್ಲಿಸುತ್ತಾರೆ.
ಈ ದೇವಾಲಯವನ್ನು 1912 ರಲ್ಲಿ ನಿರ್ಮಿಸಲಾಯಿತು ಎನ್ನಲಾಗಿದೆ. ದೇವಾಲಯ ಈಗಾಗಲೇ ಸುವರ್ಣ ಸಂಭ್ರಮವನ್ನು ಕಂಡಿದ್ದು, ಮೊದಲಿಗೆ ಗೌರಿಗೆ ಕಡಲೆ ಹಿಟ್ಟಿನ ಗೌರಮ್ಮ ಎನ್ನುತ್ತಿದ್ದ ಜನತೆ ತದ ನಂತರ ಊರ ಹಬ್ಬವಾಗಿ ಆಚರಿಸಲು ವಿಗ್ರಹಕ್ಕೆ ಚಿನ್ನದ ಕವಚ, ಆಭರಣ ತೊಡಿಸಿದರು. ಅಂದಿನಿಂದ ಇದು ಸ್ವರ್ಣ ಗೌರಿ ಎಂದೇ ಹೆಸರುವಾಸಿಯಾಗಿದೆ. ಇತರೆ ದಿನಗಳಲ್ಲಿ ಇಲ್ಲಿ ಪೂಜೆ ಪುರಸ್ಕಾರಗಳು ನಡೆಯುತ್ತವೆಯಾದರೂ, ಗೌರಿ ಹಬ್ಬದಂದು ವಿಶೇಷ ಪೂಜೆಗಳು ನಡೆಯುವುದು ಇಲ್ಲಿನ ವಿಶೇಷವಾಗಿದೆ.