ಬೆಂಗಳೂರು, ಡಿ.4 : ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ನೂರಾರು ಸಿನಿಮಾಗಳಲ್ಲಿ ಪೋಷಕ ನಟರಾಗಿ, ಮುಖ್ಯ ನಟರಾಗಿಯೂ ನಟಿಸಿದ್ದ ಶಿವರಾಂ, ವಿಷ್ಣುವರ್ಧನ್, ಡಾ.ರಾಜ್ಕುಮಾರ್ರವರಿಗೆ ಆಪ್ತರಾಗಿದ್ದರು. ಶಿವರಾಂ ಕೇವಲ ನಟರು ಮಾತ್ರವೇ ಅಲ್ಲದೆ ನಿರ್ಮಾಪಕ ಹಾಗೂ ನಿರ್ದೇಶಕರೂ ಆಗಿದ್ದರು.
ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ ಶಿವರಾಂ ಅವರ ಆರೋಗ್ಯ ವಿಚಾರಿಸಿದ್ದರು. ಶಿವರಾಂ ಅವರ ಹಿತೈಷಿಗಳು, ಅಭಿಮಾನಿಗಳು ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದ್ದರು ಆದರೆ ಪ್ರಾರ್ಥನೆ ಫಲಿಸಲಿಲ್ಲ. ನಟ ಶಿವರಾಂ ನಿಧನಕ್ಕೆ ಕರ್ನಾಟಕದ ರಾಜಕಾರಣಿಗಳು ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ನಟ ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ
ಶಿವರಾಂ ನಿಧನದಿಂದ ಕನ್ನಡನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಾಸಕ ಎಸ್.ಎ. ರಾಮದಾಸ್ ಕೂ ಮೂಲಕ ಸಂತಾಪ
ಕನ್ನಡ ಚಲನಚಿತ್ರ ರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕರೂ ಆದಂತಹ ಶಿವರಾಂ ಅವರು ನಿಧನ ಹೊಂದಿರುವ ಸುದ್ದಿ ನಿಜಕ್ಕೂ ದುಃಖಕರ. ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ನಾಡಿಗೆ ಅವರ ಅಗಲಿಕೆಯಿಂದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಶಾಸಕ ಎಸ್.ಎ. ರಾಮದಾಸ್ ಕೂ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಚಿವ ಮುರುಗೇಶ್ ನಿರಾಣಿ ಸಂತಾಪ
ತಮ್ಮ ಮನೋಜ್ಞ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಶಿವರಾಂ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಆಘಾತವಾಯಿತು. ಬಹುಮುಖ ಪ್ರತಿಭೆಯಾಗಿದ್ದ ಶಿವರಾಂ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಿ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಮುರುಗೇಶ್ ನಿರಾಣಿ ಸಂತಾಪ ಹೇಳಿದ್ದಾರೆ.