ಚಂದನವನದ ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ (90) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸಿ.ವಿ.ಶಿವಶಂಕರ್, ಇಂದು ಮಧ್ಯಾಹ್ನ ತೀವ್ರ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. 90 ವರ್ಷವಾಗಿದ್ದ ಶಿವಶಂಕರ್ ನಿಧನಕ್ಕೆ ಚಂದನವನದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಸಿ.ವಿ. ಶಿವಶಂಕರ್ ರಂಗಭೂಮಿ ನಟರಾಗಿದ್ದಾರೆ. ಬಾಲನಟನಾಗಿಯೇ ರಂಗಭೂಮಿ ಪ್ರವೇಶಿಸಿದ್ದ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಅನುಭವ ಪಡೆದ ಬಳಿಕ ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ನಿರ್ದೇಶಿಸಿದ್ದರು.