ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಥಿಯೇಟರ್ಗಳಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ. ಇದೀಗ ಸಿನಿಮಾ ಒಟಿಟಿ ಎಂಟ್ರಿಗೆ ಸಿದ್ಧವಾಗಿದೆ. ನವೆಂಬರ್ 24ಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ತೆರೆಗಪ್ಪಳಿಸಿತ್ತು.
ಡಿಸೆಂಬರ್ 29ಕ್ಕೆ ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಆಯಪಲ್ ಬಾಕ್ಸ್ ಸ್ಟುಡಿಯೋನಡಿ ರಮ್ಯಾ ನಿರ್ಮಿಸಿರುವ ಈ ಚಿತ್ರಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಆಯಕ್ಷನ್ ಕಟ್ ಹೇಳಿದರು. ಇದರಲ್ಲಿ ರಾಜ್ ಬಿ. ಶೆಟ್ಟಿ ಮತ್ತು ಸಿರಿ ರವಿಕುಮಾರ್ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದರು.
ʼಒಂದು ಮೊಟ್ಟೆಯ ಕಥೆʼ, ʻಗರುಡ ಗಮನ ವೃಷಭ ವಾಹನʼ ಚಿತ್ರಗಳ ನಂತರ ರಾಜ್ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶಿಸಿದ್ದರು. ಆರಂಭದಲ್ಲಿ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ನಟನೆಯಿಂದ ಹಿಂದೆ ಸರಿದು ಕೇವಲ ನಿರ್ಮಾಪಕಿಯಾಗಿ ಮುಂದುವರಿದಿದ್ದರು. ಅವರ ಜಾಗಕ್ಕೆ ಸಿರಿ ರವಿಕುಮಾರ್ ಎಂಟ್ರಿಯಾಗಿತ್ತು.