ದೆಹಲಿ: ನಗರದ ರೋಹಿಣಿಯಲ್ಲಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿಗೃಹದಲ್ಲಿ ಕಳೆದ 20 ದಿನಗಳಲ್ಲಿ 13 ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ದೆಹಲಿ ಸರ್ಕಾರ ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಈ ಕುರಿತು ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ, ಆರೋಗ್ಯ ಸಂಬಂಧಿ ಸಮಸ್ಯೆಗಳು ಹಾಗೂ ಅಪೌಷ್ಟಿಕತೆಯಿಂದ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ.
ಇದು ಅತ್ಯಂತ ಗಂಭೀರವಾದ ಸಮಸ್ಯೆಯಾಗಿದೆ ಎಂದು ಅತಿಶಿ ಹೇಳಿದ್ದಾರೆ, ಈ ಬಗ್ಗೆ ತಕ್ಷಣವೇ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಿಸಿ 48 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ರೋಹಿಣಿಯಲ್ಲಿರುವ ವಸತಿಗೃಹಕ್ಕೆ ಸತ್ಯಶೋಧನಾ ತಂಡವನ್ನು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ. ಈ ತಂಡವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತದೆ. ರಾತ್ರಿ ಶೆಲ್ಟರ್ ಆಡಿಟ್ ಕೂಡ ಮಾಡಲಿದ್ದೇವೆ ಎಂದರು.

