ಲಖನೌ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟ ಪ್ರಕರಣ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಮೊಘಲ್ಘರಾಹಿ ಎಂಬ ಗ್ರಾಮದಲ್ಲಿ ನಡೆದಿದ್ದು, ನಾರಾಯಣ ಸಕಾರ್ ಹರಿ ಅಥವಾ ಸಕಾರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ.
ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ. ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್ಐಟಿ ರಚಿಸಿದೆ.
ಹತ್ರಾಸ್ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

