ನವದೆಹಲಿ: ಫುಟ್ಪಾತ್ ಮೇಲೆ ಮಲಗಿದ್ದ ಐವರ ಮೇಲೆ ಟ್ರಕ್ವೊಂದು ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಇಂದು ನಡೆದಿದೆ.
ಮುಂಜಾನೆ 5:30ರ ವೇಳೆಗೆ ಘಟನೆ ಸಂಭವಿಸಿದೆ. ಮನೆ, ಆಶ್ರಯವಿಲ್ಲದ ಐವರು ಫುಟ್ಪಾತ್ ಮೇಲೆ ಮಲಗಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ ಹರಿದಿದೆ. ತಕ್ಷಣವೇ ಎಲ್ಲರನ್ನೂ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಶಾಸ್ತ್ರಿ ಪಾರ್ಕ್ ಕೊಳೆಗೇರಿ ನಿವಾಸಿ ಮುಸ್ತಾಕ್ (35), ಗಾಂಧಿನಗರ ನಿವಾಸಿ ಕಮಲೇಶ್ (36) ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಟ್ರಕ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ, ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಅದರ ದಾಖಲೆಗಳ ಮೂಲಕ ಮಾಲೀಕರನ್ನು ಸಂಪರ್ಕಿಸುತ್ತಿದ್ದಾರೆ. ಚಾಲಕ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ನಿರ್ಲಕ್ಷ್ಯದ ಚಾಲನೆಯಿಂದ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

