ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಘಟನೆ ನಡೆದ ಆರ್ಜಿ ಕರ್ ಆಸ್ಪತ್ರೆ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ನಡುವೆ ಜನ ದುಷ್ಕರ್ಮಿಗಳ ಗುಂಪೊಂದು ಆಸ್ಪತ್ರೆಗೆ ನುಗ್ಗಿ ಧ್ವಂಸ ಮಾಡಿದೆ.
ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಖಂಡಿಸಿ ಕಿರಿಯ ವೈದ್ಯರು ಅಹೋರಾತ್ರಿ ಪ್ರತಿಭಟನೆ ನಡುವೆ ದುಷ್ಕರ್ಮಿಗಳು ಮಧ್ಯರಾತ್ರಿ 12.40 ರ ಸುಮಾರಿಗೆ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ನುಗ್ಗಿ ಆಸ್ಪತ್ರೆಯ ಆಸ್ತಿ-ಪಾಸ್ತಿ ನಾಶಪಡಿಸಿದ್ದಾರೆ. ಆಸ್ಪತ್ರೆ ಮೇಲೆ ಕಲ್ಲು ತೂರಾಟವನ್ನು ನಡೆಸಿದ್ದಾರೆ.
ಇದು ಹೊರಗಿನಿಂದ ಬಂದಿರುವ ತಂಡದಿಂದ ನಡೆದಿರುವ ಕೃತ್ಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಇನ್ನು ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದು, ಲಾಠಿಚಾರ್ಜ್ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸಿಬಿಐ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದೆ.
ಮತ್ತೊಂದೆಡೆ ಘಟನೆಯನ್ನು ಖಂಡಿಸಿ ಇಂದು ರಾತ್ರಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನ ಪ್ರತಿಭಟನೆ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್ಲೆಸ್ ಮತ್ತು ಆರ್ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್ ಮೆರವಣಿಗೆ ಕೈಗೊಂಡರು.
ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

