ನವದೆಹಲಿ: ಹೊಸ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಬಂಧನವನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ವಿಕ್ರಮ್ ಚೌಧರಿ ಅವರು ಈ ವಿಷಯವನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದರು.
ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಜಾಮೀನು ನೀಡಲು ನಿರಾಕರಿಸಿದ್ದರು. ತನಿಖಾ ಸಂಸ್ಥೆಯು ಹೈಕೋರ್ಟ್ನಲ್ಲಿ ಎಎಪಿ ಮುಖ್ಯಸ್ಥರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು.
ಅವರು ಮದ್ಯ ಹಗರಣದ `ಮಾಸ್ಟರ್ ಮೈಂಡ್’ ಮತ್ತು ಬಿಡುಗಡೆಯಾದರೆ ತನಿಖೆಯ ಮೇಲೆ ಪ್ರಭಾವ ಬೀರಬಹುದು ಎಂದು ವಾದಿಸಿದ್ದರು. ಅಲ್ಲದೇ ಅವರ ಬಂಧನವಿಲ್ಲದೆ ತನಿಖೆಯನ್ನು ಮುಗಿಸಲು ಸಾಧ್ಯವಿಲ್ಲ. ಒಂದು ತಿಂಗಳೊಳಗೆ ನಾವು ಚಾರ್ಜ್ ಶೀಟ್ ಸಲ್ಲಿಸಿದ್ದೇವೆ ಎಂದು ಸಿಬಿಐ ಪರ ವಕೀಲ ಡಿ.ಪಿ ಸಿಂಗ್ ಹೇಳಿದ್ದಾರೆ.

