ನವದೆಹಲಿ: ಕಾಂಗ್ರೆಸ್ ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಕನಸು ಮತ್ತೊಮ್ಮೆ ಭಗ್ನವಾಗಿದ್ದು, ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 11:00 ಗಂಟೆಗೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ಸಂಜೆ 5:30ಕ್ಕೆ ಮುಂದೂಡಲಾಗಿದೆ. ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ಸಬೆ ನಡೆಯಲಿದ್ದು, ಬಳಿಕ ಅಶೋಕ ಹೊಟೇಲ್ನಲ್ಲಿ ಸಂಜೆ 7ಗಂಟೆಗೆ ರಾತ್ರಿ ಡಿನ್ನರ್ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ CWC ಸದಸ್ಯರು ಭಾಗಿಯಾಗಲಿದ್ದಾರೆ.
ರಾಜ್ಯದಿಂದ ಈ ಸಭೆಯಲ್ಲಿ ಕರ್ನಾಟಕ ದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರಾಜ್ಯ ಸಚಿವರ ಜೊತೆಗೆ ಪ್ರತ್ಯೇಕ ಸಭೆಯನ್ನು ನಡೆಸಿದ್ದರು. ಯಾವ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಮತದಾನ ಆಗಿದೆ. ಈ ಎಲ್ಲಾ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಕ್ಕ ಜಯ ಹಾಗೂ ಕೆಲ ರಾಜ್ಯದಲ್ಲಿ ಕಾಂಗ್ರೆಸ್ ಗೆ ಆದ ನಷ್ಟದ ಬಗ್ಗೆ ಅವಲೋಕನ ನಡೆಯಲಿದೆ. ಇಂಡಿಯಾ ಮೈತ್ರಿಕೂಟವನ್ನ ರಾಜ್ಯಗಳಲ್ಲಿ ಹೇಗೆ ಬಳಸಿಕೊಳ್ಳಬೇಕು. ರಾಜ್ಯವಾರು ಚುನಾವಣೆಗಳಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು ಹಾಗೂ ರಾಜ್ಯವಾರು ಬಂದಿರುವ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ಇಂದು ನಡೆಯಲಿದೆ.