ನವದೆಹಲಿ: ಪ್ರತಿವರ್ಷ ಜೂನ್‌ 25 ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಗಿ ಆಚರಿಸಲಾಗುವುದು ಎಂದು ಸಚಿವ ಅಮಿತ್‌ ಶಾ ಘೋಷಣೆ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಮಿತ್‌ ಶಾ ಈ ಕುರಿತು ಕೇಂದ್ರ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಸುತ್ತೋಲೆ ಪ್ರತಿಯನ್ನೂ ಹಂಚಿಕೊಂಡಿದ್ದಾರೆ.

ಪ್ರತಿ ವರ್ಷ ʻಸಂವಿಧಾನ ಹತ್ಯಾ ದಿವಸ್ʼ ಆಚರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 1975ರ ಜೂನ್ 25 ರಂದು, ಅಂದಿನ ಪ್ರಧಾನಿ ಇಂದಿರಾಗಾಂಧಿ ಸರ್ವಾಧಿಕಾರಿ ಮನಸ್ಥಿತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು. ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು.

ಯಾವುದೇ ತಪ್ಪಿಲ್ಲದೇ ಲಕ್ಷಾಂತರ ಜನರನ್ನ ಕಂಬಿಯ ಹಿಂದೆ ಎಸೆಯಲಾಯಿತು. ಮಾಧ್ಯಮಗಳ ಧ್ವನಿಯನ್ನು ಮೌನಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ ಜೂನ್ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್ʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ದಿನವು 1975ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

https://x.com/AmitShah/status/1811710157585531372?