ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಜಾಮೀನು ಮಂಜೂರು ಮಾಡಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ ಹಾಗೂ ಕೆ.ವಿ ವಿಶ್ವನಾಥನ್ ಅವರ ಪೀಠವು ಕವಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ.

ತಮಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಕವಿತಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಬಳಿಕ ನ್ಯಾಯಾಲಯವು, ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯಗಳಿಗೆ (ಇ.ಡಿ) ನೋಟಿಸ್‌ ನೀಡಿತ್ತು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಅದೇ ರೀತಿ ಎಎಪಿ ನಾಯಕ ಮನೀಷ್‌ ಸಿಸೋಡಿಯಾ ಅವರಿಗೆ ಜಾಮೀನು ನೀಡಿದೆ. ಈ ತೀರ್ಪುಗಳನ್ನು ಕವಿತಾ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.