ಪಾಟ್ನಾ: ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ 50ರಿಂದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ಇಂದು ತಳ್ಳಿ ಹಾಕಿದೆ.

ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠವು ಇಂದು ಈ ಆದೇಶ ಪ್ರಕಟಿಸಿದೆ. ಇದರಿಂದ ಮುಖ್ಯಮಂತ್ರಿ ನಿತೀತ್ ಕುಮಾರ್ ಅವರಿಗೆ ಭಾರಿ ಹಿನ್ನಡೆಯಾಗಿದೆ ಎನ್ನಲಾಗಿದೆ.

2023ರ ನವೆಂಬರ್ 21ರಂದು ಮೀಸಲಾತಿಯನ್ನು ಶೇ 50ರಿಂದ 65ಕ್ಕೆ ಏರಿಕೆ ಮಾಡುವ ಪ್ರಸ್ತಾವಕ್ಕೆ ಬಿಹಾರ ಸಚಿವ ಸಂಪುಟ ಅನುಮೋದನೆ ನೀಡಿ, ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸುಮಾರು ಹತ್ತರಷ್ಟು ಮೇಲ್ಮನವಿಗಳನ್ನು ಹೈಕೋರ್ಟಿಗೆ ಸಲ್ಲಿಸಲಾಗಿತ್ತು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ರಿತಿಕಾ ರಾಣಿ, ‘ಮೀಸಲಾತಿ ಜಾರಿ ಸಂವಿಧಾನದ ಉಲ್ಲಂಘನೆಯಾಗಿದೆ’ ಎಂದು ಹೇಳಿದ್ದಾರೆ. ಎರಡೂ ಕಡೆಯ ವಾದ ಆಲಿಸಿದ ಬಳಿಕ ನ್ಯಾಯಾಲಯ ಮಾರ್ಚ್‌ನಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು.