ಲಕ್ನೋ: ರಾಮರಾಜ್ಯ ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಎನ್‌ಡಿಎಗೆ ಭಾರಿ ಹಿನ್ನಡೆಯಾಗಿದೆ.

ಸಮಾಜವಾದಿ ಪಕ್ಷವು 34 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಪ್ರಸ್ತುತ 35 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಮೇಠಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರಿಗಿಂತ 17,000 ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ 23,635 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

18ನೇ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಎಲ್ಲರ ಚಿತ್ತ ಉತ್ತರ ಪ್ರದೇಶದ ಕಡೆಗೆ ನೆಟ್ಟಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು (80) ಕ್ಷೇತ್ರಗಳನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶ. ಇಲ್ಲಿ ಗೆದ್ದವರು ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಾರೆ ಎಂದೇ ಹೇಳಲಾಗುತ್ತದೆ.

ಕಳೆದ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ದು ಕೇವಲ ಒಂದೇ ಒಂದು ಸ್ಥಾನ. ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಯಲ್ಲಿ (2019) ಸೋನಿಯಾ ಗಾಂಧಿ ಗೆದ್ದಿದ್ದರು. ಪಕ್ಷದ ಮತ್ತೊಂದು ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ ರಾಹುಲ್‌ ಗಾಂಧಿ ಅವರನ್ನು ಬಿಜೆಪಿ ಸ್ಮೃತಿ ಇರಾನಿ ಪರಾಭವಗೊಳಿಸಿದ್ದರು.

ಈ ಬಾರಿ ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್‌ನ ಕಿಶೋರ್‌ ಲಾಲ್‌ ಶರ್ಮಾ ಮುನ್ನಡೆ ಸಾಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್‌ ಸೀಟು ಹಂಚಿಕೆ ಮಾಡಿಕೊಂಡಿತ್ತು.